ಬೆಂಗಳೂರು: ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಬೇಕು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು, ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ವಿಮಾನಯಾನ ಸೌಕರ್ಯ ಹೆಚ್ಚಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆಗೆ ಅವರು ಮಂಗಳವಾರ ಸಭೆ ನಡೆಸಿದರು. ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಭೆಯಲ್ಲಿದ್ದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹಲವೆಡೆಗೆ ವಿಮಾನಯಾನ ಸಂಪರ್ಕವಿದೆ. ಅಲ್ಲಿ ಪ್ರಯಾಣಿಕರ ದಟ್ಟಣೆಯೂ ಹೆಚ್ಚಾಗಿದೆ. ಅದನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಅಭಿವೃದ್ಧಿಪಡಿಸುವ ಹಲವು ಅವಕಾಶಗಳಿವೆ. ಈ ಸಂಬಂಧ ವಿಸ್ತೃತ ವರದಿಯನ್ನು ಸಿದ್ಧಪಡಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಈ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಿ’ ಎಂದು ಸಚಿವ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರ್ಗಿ, ಮೈಸೂರು, ಬೀದರ್, ಹುಬ್ಬಳ್ಳಿ, ಬೆಳಗಾವಿ, ವಿದ್ಯಾನಗರ ವಿಮಾನ ನಿಲ್ದಾಣಗಳಿಂದ ಇತರ ರಾಜ್ಯಗಳ ನಗರಗಳಿಗೆ ವಿಮಾನಯಾನ ಸೇವೆ ಒದಗಿಸಿ ಎಂದು ಸಚಿವ ಎಂ.ಬಿ.ಪಾಟೀಲ ಅವರು ವಿಮಾನಯಾನ ಸಂಸ್ಥೆಗಳಿಗೆ ಮನವಿ ಮಾಡಿದರು.
ಇಂಡಿಗೊ, ಸ್ಪೈಸ್ಜೆಟ್, ಸ್ಟಾರ್ ಏರ್, ಏರ್ ಇಂಡಿಯಾ, ಆಕಾಸಾ ಏರ್, ಅಲೈಯನ್ಸ್ ಏರ್ವೇಸ್, ಸ್ಪೈಸ್ ಜೆಟ್ ಕಂಪನಿಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ವಿಜಯಪುರ ವಿಮಾನ ನಿಲ್ದಾಣವು ಸಿದ್ಧವಾಗಿದ್ದು, ಇನ್ನಷ್ಟೇ ಉದ್ಘಾಟನೆಯಾಗಬೇಕಿದೆ. ವಿಮಾನ ಸಂಪರ್ಕ ಕಲ್ಪಿಸುವ ಸಂದರ್ಭದಲ್ಲಿ ಈ ವಿಮಾನ ನಿಲ್ದಾಣವನ್ನೂ ಪರಿಗಣಿಸಬೇಕು ಎಂದು ಸಚಿವರು ಕೋರಿದರು.
ಕಲಬುರ್ಗಿ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಒದಗಿಸಲು ಅಗತ್ಯವಿರುವ ಎಲ್ಲ ಸವಲತ್ತುಗಳನ್ನ ನೀಡುತ್ತೇವೆ’ ಎಂದು ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು. ಕಲಬುರ್ಗಿ ವಿಮಾನ ನಿಲ್ದಾಣವನ್ನು ವಿಮಾನಯಾನ ಸಂಸ್ಥೆಗಳು ನಿರ್ವಹಣೆ ಮತ್ತು ರಿಪೇರಿ ಕೇಂದ್ರವಾಗಿಯೂ ಬಳಸಿಕೊಳ್ಳಬಹುದು. ಅದಕ್ಕೆ ಅಗತ್ಯವಿರುವ ಎಲ್ಲ ಸಹಕಾರವನ್ನು ಒದಗಿಸುತ್ತೇವೆ ಎಂದರು.
ಬೆಳಗಾವಿಗೆ ಮತ್ತೆ ಅನ್ಯಾಯ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾಗಿರುವ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಭವ್ಯ ಇತಿಹಾಸ ಇದೆ. ಗೋವಾ ವಿಮೋಚನೆ ಕಾಲಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಕೇಂದ್ರ ಸ್ಥಾನವಾಗಿ ನಿರ್ಣಾಯಕ ಪಾತ್ರ ವಹಿಸಿತ್ತು. ಸದ್ಯ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಕೇಂದ್ರ ಸ್ಥಾನದಂತಿರುವ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಬೇಕು ಎಂಬ ಬೇಡಿಕೆ ದಶಕಗಳಿಂದ ವ್ಯಕ್ತವಾಗಿತ್ತು. ಇತ್ತೀಚಿನ ದಶಕಗಳಲ್ಲಿ ನೆರೆಯ ಹುಬ್ಬಳ್ಳಿ ಗಿಂತ ಬೆಳಗಾವಿಯಲ್ಲಿ ಹೆಚ್ಚಿನ ಪ್ರಯಾಣಿಕರು ವಿಮಾನಯಾನ ಕೈಗೊಳ್ಳುತ್ತಿದ್ದರು. ಆದರೆ ಇದೆಲ್ಲವನ್ನು ಪರಿಗಣಿಸದೆ ರಾಜ್ಯ ಸರಕಾರ ಈಗ ಹುಬ್ಬಳ್ಳಿಗೆ ಆದ್ಯತೆ ನೀಡುತ್ತಿರುವುದು ಬೆಳಗಾವಿ ಜನತೆಯ ಪಾಲಿಗೆ ಮತ್ತೆ ಅನ್ಯಾಯದ ಬರೆ ಎಳೆದಂತಾಗಿದೆ.
ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ವಿಶೇಷ ಅಧಿವೇಶನ ಆಯೋಜಿಸುವ ಮೂಲಕ ದಶಕಗಳಿಂದ ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿ ಎಂದು ಗುರುತಿಸಿಕೊಳ್ಳುತ್ತಿದೆ. ಆದರೆ ಈಗ ಎರಡನೇ ರಾಜಧಾನಿಯನ್ನು ಕೈ ಬಿಟ್ಟು ಎಂದಿನಂತೆ ಹುಬ್ಬಳ್ಳಿಗೆ ಆದ್ಯತೆ ನೀಡುತ್ತಿರುವುದು ಸರಿಯಲ್ಲ ಎಂದು ಬೆಳಗಾವಿ ಜಿಲ್ಲೆಯ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.