ಬೆಳಗಾವಿ: ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯಲ್ಲೂ ಹಿಂದೆ ಬಿದ್ದಿಲ್ಲ. ಎರಡನ್ನೂ ಅಚ್ಚುಕಟ್ಟಾಗಿ ಮುಂದುವರಿಸಿಕೊಂಡು ಹೊಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಜಂಟಿ ಸಾರಿಗೆ ಕಚೇರಿ, ಬೆಳಗಾವಿ ವಿಭಾಗದ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಬಡವರಿಗಾಗಿ ಬಿಜೆಪಿಗರು ಒಂದೇ ಒಂದು ಯೋಜನೆ ತಂದ ಉದಾಹರಣೆ ಇಲ್ಲ, ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವುದು ವಿರೋಧಿಗಳಿಗೆ ಬೇಕಿಲ್ಲ, ಜನರಿಗೆ ಅವರು ಯಾವತ್ತೂ ಒಳ್ಳೆಯದನ್ನು ಮಾಡಿಲ್ಲ. ನಮ್ಮ ಯೋಜನೆಗಳನ್ನು ಟೀಕಿಸುತ್ತಿದ್ದ ಅವರು ಈಗ ಬಿಹಾರ ಚುನಾವಣೆ ಸಂದರ್ಭದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ ಎಂದರು.
ಸಾರಿಗೆ ಇಲಾಖೆಯ ನೂತನ ಕಟ್ಟಡದಿಂದಾಗಿ ಬೆಳಗಾವಿಯ ಎರಡನೇ ರಾಜಧಾನಿ ಸ್ಥಾನಮಾನಕ್ಕೆ ಮತ್ತೊಂದು ಗರಿ ಮೂಡಿದಂತಾಗಿದೆ. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಳಗಾವಿಯಲ್ಲಿ ಹಂತ ಹಂತವಾಗಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿದ್ದು, ಈಗ ಸುಸಜ್ಜಿತ ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಜಂಟಿ ಸಾರಿಗೆ ಆಯುಕ್ತರ ಕಚೇರಿ ಕೂಡ ಹೊಸ ಕಟ್ಟಡವನ್ನು ಹೊಂದಿದಂತಾಗಿದೆ. ಇದು ನಮ್ಮ ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದರು.
ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ ಎನ್ನುವ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿಯ ಜೊತೆ ಜೊತೆಗೇ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನೂ ಮುಂದುವರಿಸಿಕೊಂಡು ಬರುತ್ತಿದೆ. ರಾಜ್ಯದ ಆದಾಯದಲ್ಲಿ ಬಹು ದೊಡ್ಡ ಪಾಲನ್ನು ನೀಡುವ ಸಾರಿಗೆ ಇಲಾಖೆಗೆ ಉತ್ತಮ ಮೂಲಭೂತ ಸೌಲಭ್ಯಗಳು ಕೂಡ ಅಗತ್ಯ. ಹಾಗಾಗಿ ನಮ್ಮ ಸರ್ಕಾರ ಅಂತಹ ಕಟ್ಟಡವನ್ನು ಇಲ್ಲಿ ಒದಗಿಸಿದೆ. ಇಲ್ಲಿಂದ ಜನರಿಗೆ ತ್ವರಿತ ಮತ್ತು ಕಿರುಕುಳ ರಹಿತ ಸೇವೆ ಸಿಗಲಿದೆ ಎಂದು ಆಶಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಸಾರಿಗೆ ಇಲಾಖೆ ಸಿಬ್ಬಂದಿ ಜನಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು. ಕಿರುಕುಳವಿಲ್ಲದೆ ಸೇವೆ ನೀಡುವ ಮೂಲಕ ನಮ್ಮ ಸರಕಾರಕ್ಕೆ ಒಳ್ಳೆಯ ಹೆಸರು ತರಬೇಕು. ರಾಮಲಿಂಗಾ ರೆಡ್ಡಿ ಅವರು ನಮ್ಮ ಸರ್ಕಾರದ ಅತ್ಯಂತ ಹಿರಿಯ ಸಚಿವರು. ನಮ್ಮೆಲ್ಲರಿಗೆ ಹಿರಿಯಣ್ಣನಂತೆ, ಅವರಿಂದಾಗಿ ಇಲಾಖೆಗೆ ಹೆಚ್ಚಿನ ಗೌರವ ಬಂದಿದೆ. ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಇಲಾಖೆಯ ಅಧಿಕಾರ ವಹಿಸಿಕೊಂಡಾಗಿನಿಂದ ಇಲಾಖೆಗೆ ಹೊಸ ಸ್ವರೂಪ ನೀಡಿದ್ದಾರೆ. ಅನೇಕ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಇನ್ನೂ ಹೆಚ್ಚಿನ ಬಸ್ ಒದಗಿಸಬೇಕು ಎಂದು ಸಚಿವರು ವಿನಂತಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರಡ್ಡಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಆಸಿಫ್ ಸೇಠ್, ಮಹಾಂತೇಶ ಕೌಜಲಗಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಸಾರಿಗೆ ಮತ್ತು ರಸ್ತೆಯ ಸುರಕ್ಷತೆಯ ಆಯುಕ್ತ ಯೋಗೀಶ್ ಎ.ಎಂ, ಬೆಳಗಾವಿ ನಗರ ಪೋಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ, ಜಂಟಿ ಆಯುಕ್ತರಾದ ಓಂಕಾರೇಶ್ವರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಆಯುಕ್ತ ಹಾಲಸ್ವಾಮಿ, ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ ಮುಂಡಾಸೆ, ಬಿ.ಪಿ.ಉಮಾಶಂಕರ್, ಪುರುಷೋತ್ತಮ್, ಸಿ.ಟಿ.ಮೂರ್ತಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ರೈತರ ಅನುಕೂಲಕ್ಕಾಗಿ ತಕ್ಷಣದಿಂದಲೇ ನೀರು ಬಿಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ
ಬೆಳಗಾವಿ : ರೈತರ ಅನುಕೂಲಕ್ಕಾಗಿ, ಅವರ ಬೆಳೆಗಳನ್ನು ರಕ್ಷಿಸಲು ತಕ್ಷಣದಿಂದಲೇ ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಲು ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ.
ಭೆಳಗಾವಿ ಉತ್ತರ ವಲಯ ಮುಖ್ಯ ಅಭಿಯಂತರರ ಕಚೇರಿಯಲ್ಲಿ ಶುಕ್ರವಾರ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದ ಸಚಿವರು, ರೈತರು ಖುಷಿಯಾಗಿದ್ದರೆ ದೇಶವೇ ಖುಷಿಯಾಗಿರುತ್ತದೆ. ನಾವೆಲ್ಲ ಖುಷಿಯಾಗಿರುತ್ತೇವೆ. ಹಾಗಾಗಿ ರೈತರ ಅನುಕೂಲಕ್ಕಾಗಿ ಇಂಂದಿನಿಂದಲೇ ಕಾಲುವೆಗಳಿಗೆ ನೀರನ್ನು ಹರಿಬಿಡಲಾಗುವುದು. ಕೊನೆಯವರೆಗೆ ತಲುಪುವವರೆಗು ನೀರು ಹರಿಯಲಿದೆ. ಯಾರೂ ಆತಂಕಪಡಬೇಕಾಗಿಲ್ಲ ಎಂದು ತಿಳಿಸಿದರು.
ಈವರೆಗೆ ಉತ್ತಮ ಮಳೆಯಾಗಿದೆ. ಮುಂದೆ ಕೂಡ ರೇಣುಕಾ ಯಲ್ಲಮ್ಮನ ಕೃಪೆಯಿಂದ ಉತ್ತಮ ಮಳೆಯಾಗಲಿದೆ ಎಂದು ಆಶಿಸೋಣ. ಕುಡಿಯುವ ನೀರಿನ ಪ್ರಮಾಣ ಉಳಿಸಿಕೊಂಡು, ನೀರಾವರಿಗಾಗಿರುವ 4 ಟಿಎಂಸಿ ನೀರಿನಲ್ಲಿ ಕೊನೆಯ ಹಂತದವರೆಗೂ ತಲುಪುವವರೆಗೆ ನಿಲ್ಲಿಸದೆ ನೀರು ಹರಿಸಲಾಗುವುದು ಎಂದು ಅವರು ತಿಳಿಸಿದರು.
ರೈತರು ಬೆಳೆ ರಕ್ಷಣೆಗಾಗಿ ನೀರು ಬಿಡುವಂತೆ ಕೋರಿದ್ದರು. ಹಾಗಾಗಿ ಸಲಹಾ ಸಮಿತಿ ಸಭೆ ನಡೆಸಿದ್ದೇನೆ. ರೈತ ಮುಖಂಡರು, ಜನಪ್ರತಿನಿದಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನೀರು ಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ರೈತರಿಗೆ ಎಲ್ಲ ದೃಷ್ಟಿಯಿಂದ ಅನುಕೂಲವಾಗಬೇಕೆನ್ನುವುದು ನಮ್ಮ ಉದ್ದೇಶ. ಮುಂದೆ ಕೂಡ ಉತ್ತಮ ಮಳೆಯಾಗಲಿದೆ ಎನ್ನುವ ಆಶಾಭಾವನೆ ಇದೆ ಎಂದು ಅವರು ಹೇಳಿದರು.
ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ರೈತರ ಹಾಗೂ ನಮ್ಮೆಲ್ಲರ ಮನವಿಗೆ, ಭಾವನೆಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ತಕ್ಷಣ ನೀರು ಬಿಡುಗಡೆಗೆ ಆದೇಶ ನೀಡಿದ್ದಾರೆ. ಅವರಿಗೆ ಎಲ್ಲರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಶಾಸಕ ಬಿಬಿ ಚಿಮ್ಮನಕಟ್ಟಿ, ಮಹಾಮಂಡಳಿ ಅಧ್ಯಕ್ಷ ಸದುಗೌಡ ಪಾಟೀಲ, ಪ್ರಭಾರಿ ಪ್ರಾದೇಶಕ ಆಯುಕ್ತರೂ ಆಗಿರುವ ಜಿಲ್ಲಾಧಿಕಾರಿ ಮಹ್ಮದ್ ರೋಷನ್, ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಸುಪರಿಂಟೆಂಡೆಂಟ್ ಎಂಜಿನಿಯರ್ ಲಕ್ಷ್ಮಣ ನಾಯಕ, ಎಸ್.ಬಿ.ಮಲ್ಲಿಗವಾಡ, ಮುದಿಗೌಡರ್ ಮೊದಲಾದವರು ಇದ್ದರು.