ಬೆಂಗಳೂರು: ಇಂದಿನಿಂದ (ಶನಿವಾರ) ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು 710363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್ 17 ರವರೆಗೆ ಪರೀಕ್ಷೆ ನಡೆಯಲಿದೆ. 1217 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು ಮೊದಲ ದಿನ ಕನ್ನಡ, ಅರೇಬಿಕ್ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಿಗೆ ಪರೀಕ್ಷೆ ನಡೆಯಲಿದೆ.
ವಿಜ್ಞಾನ ವಿಭಾಗದಲ್ಲಿ 292645, ವಾಣಿಜ್ಯ ವಿಭಾಗದಲ್ಲಿ 211174 ಮತ್ತು ಕಲಾ ವಿಭಾಗದಲ್ಲಿ 142982 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್ಇಎಬಿ) ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ವೆಬ್ ಕಾಸ್ಟಿಂಗ್ ನಡೆಯಲಿದ್ದು ಜಿಲ್ಲಾಧಿಕಾರಿಗಳು ಪರೀಕ್ಷಾ ಅಕ್ರಮದ ಬಗ್ಗೆ ನಿಗಾ ಇಡಲಿದ್ದಾರೆ.
ಇನ್ನುಇ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಪೋಟೋಕಾಪಿ, ಸೈಬರ್, ಕಂಪ್ಯೂಟರ್ ಸೆಂಟರ್ ಗಳ ಕಾರ್ಯನಿರ್ವಹಣೆಯನ್ನು ನಿಷೇಧಿಸಲಾಗಿದೆ. ಪರೀಕ್ಷಾ ಅಕ್ರಮ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಪ್ರಶ್ನೆ ಪತ್ರಿಕೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಮೇಲೆ ವಿಶೇಷ ನಿಗಾ ಇಡಲು ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ವಸ್ತುಗಳಾದ ಮೊಬೈಲ್, ಸ್ಮಾರ್ಟ್ ವಾಚ್ ಸೇರಿದಂತೆ ಇನ್ನಿತರ ಉಪಕರಣಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳುವ ಮತ್ತು ಮರಳುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ತೋರಿಸಿದಲ್ಲಿ ಕೆಎಸ್ ಆರ್ಟಿಸಿ ಮತ್ತು ಬಿಎಂಟಿಸಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಿದೆ. ಏಪ್ರಿಲ್ 7 ಫಲಿತಾಂಶ ಪ್ರಕಟಿಸುವ ಗುರಿಯನ್ನು ಪರೀಕ್ಷಾ ಮಂಡಳಿ ಇಟ್ಟುಕೊಂಡಿದೆ.


