ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರ ನಿಧನರಾಗಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕರಾಗಿ ಅವರು ನಾಡಿನೆಲ್ಲೆಡೆ ಜನಪ್ರಿಯತೆ ಗಳಿಸಿದ್ದರು. ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಅಕ್ಟೋಬರ್ನಲ್ಲಿ ತಮ್ಮ ಪುತ್ರಿಯ ಒಡೆತನದ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ, ಕಿಡ್ನಿವೈಫಲ್ಯದಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಆಸ್ಪತ್ರೆಯಲ್ಲಿಯೇ ದೀರ್ಘಕಾಲದಿಂದ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಭಾನುವಾರ ಸಂಜೆ 6:45ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಅವರ ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಾಮನೂರು ಕೊಡುಗೆ ದಾವಣಗೆರೆಗೆ ಅಪಾರ. ಶಾಮನೂರು ಅವರ ಸಾವಿಗೆ ಪಕ್ಷಾತೀತವಾಗಿ ಸಕರುಗಳು, ಸಚಿವರು, ಮುಖಂಡರು, ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.


