ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳ ಸೀಮಿತ ಪರಿಧಿಯಲ್ಲಿ ಸಂಚರಿಸುವ ವಕೀಲರಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವಂತೆ ರಾಜ್ಯ ವಕೀಲರ ಪರಿಷತ್ ಕೇಂದ್ರಕ್ಕೆ ಮನವಿ ಮಾಡಿದೆ.
ಈ ಸಂಬಂಧ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಸ್.ಎಸ್.ಮಿಟ್ಟಲಕೋಡ್, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ತಾಲ್ಲೂಕು ಕೇಂದ್ರಗಳಿಂದ 50 ಹಾಗೂ ಜಿಲ್ಲಾ ಕೇಂದ್ರಗಳಿಂದ 100ಕಿ.ಮೀ ಪರಿಧಿಯಲ್ಲಿ ವೃತ್ತಿನಿರತ ವಕೀಲರು ತಮ್ಮ ಅಧಿಕೃತ ಕೆಲಸದ ನಿಮಿತ್ತ ಸಂಚರಿಸುವಾಗ ಅವರ ವಾಹನಗಳಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.