ಬೆಳಗಾವಿ: ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ. ಹೀಗಾಗಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಇವರು ಭಾಗವಹಿಸಲು ನ್ಯಾಯಾಲಯ ಅವಕಾಶ ನೀಡಿದ್ದರಿಂದ ಈ ಇಬ್ಬರು ಈಗ ಮತದಾನ ಮಾಡುವ ಹಕ್ಕು ಪಡೆದಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯರಾದ ಮಂಗೇಶ್ ಪವಾರ್ ಮತ್ತು ಜಯಂತ ಯಾದವ್ ಅವರು ಸದಸ್ಯತ್ವದಿಂದ ಅನರ್ಹತೆಗೊಂಡಿದ್ದರು. ಮಾರ್ಚ್ 15 ರಂದು ನಡೆಯುವ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಸ್ಪರ್ಧೆಸಲು ಮತ್ತು ಮತ ಚಲಾಯಿಸಲು ಸಾಧ್ಯವಾಗದೇ ಇರುವ ಪರಿಸ್ಥಿತಿ ಇತ್ತು. ಆದರೆ ಇದೀಗ ನ್ಯಾಯಾಲಯ ಇವರಿಗೆ ಅವಕಾಶ ಕಲ್ಪಿಸಿರುವುದರಿಂದ ಇಬ್ಬರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾಗವಹಿಸಬಹುದಾಗಿದೆ.
ಬೆಳಗಾವಿಯ ಗೋವಾವೇಸ್ ನಲ್ಲಿ ನಿರ್ಮಿಸಲಾಗಿರುವ ತಿನಿಸು ಕಟ್ಟೆ ಮಳಿಗೆಗಳನ್ನು ಪತ್ನಿಯರ ಹೆಸರಿನಲ್ಲಿ ಪಡೆದಿದ್ದಾರೆ ಎಂಬ ಕಾರಣಕ್ಕೆ ಪ್ರಾದೇಶಿಕ ಆಯುಕ್ತ ಶೆಟ್ಟೆಣ್ಣವರ ಅವರು ಈ ಇಬ್ಬರನ್ನು ಸದಸ್ಯರನ್ನು ಅನರ್ಹತೆಗೊಳಿಸಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾಯಾಲಯ ಇಬ್ಬರು ಸದಸ್ಯರಿಗೆ ಮತದಾನ ಮಾಡುವ ಹಕ್ಕು ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ ಪಾಟೀಲ ಅವರು, ಅಧಿಕಾರಿಗಳು ಕಾಂಗ್ರೆಸ್ ನಾಯಕರ ಮಾತು ಕೇಳಿ ಕಾನೂನುಬಾಹಿರವಾಗಿ ಬಿಜೆಪಿಯ ಇಬ್ಬರು ಸದಸ್ಯರನ್ನು ಅನರ್ಹತೆಗೊಳಿಸಿದ್ದರು. ಆದರೆ ಈ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದು ಸತ್ಯಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ. ಜಯಂತ ಯಾದವ್ ಮತ್ತು ಮಂಗೇಶ ಪವಾರ್ ಅವರನ್ನು ಕಾಂಗ್ರೆಸ್ ಸರಕಾರದ ಮಾತು ಕೇಳಿ ಪ್ರಾದೇಶಿಕ ಆಯುಕ್ತರು ಅನರ್ಹತೆಗೊಳಿಸಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದಾಗ ನಗರಾಭಿವೃದ್ಧಿ ಕಾರ್ಯದರ್ಶಿಗಳು ವಿಚಾರಣೆ ನಡೆಸಲು ನ್ಯಾಯಾಲಯ ಹೇಳಿತ್ತು. ಅಲ್ಲಿ ನಮ್ಮ ವಿರುದ್ಧವೇ ಕಾರ್ಯದರ್ಶಿಗಳು ಆದೇಶ ನೀಡಿದ್ದರು. ಈಗ ನ್ಯಾಯಾಲಯ ಮಂಗೇಶ್ ಮತ್ತು ಜಯಂತ್ ಪರ ಆದೇಶ ಹೊರಡಿಸಿದೆ. ನ್ಯಾಯಾಲಯದ ಈ ಆದೇಶವನ್ನು ಸ್ವಾಗತಿಸಲಾಗುವುದು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದರ ಬಗ್ಗೆಯೂ ನ್ಯಾಯಾಲಯ ಹೇಳಿದೆ. ಯಾರದ್ದೋ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕೆಲಸ ಮಾಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.