ಬೆಳಗಾವಿ: ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಘಟನೆ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘಟನೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಲಾಗಿದೆ.
ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತಿ ಪ್ರಕರಣ ದಾಖಲಿಸಲು ಸಚಿವ ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ.


