ಬೆಳಗಾವಿ: 1824 ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯದ ವಿಜಯೋತ್ಸವದ 201ನೇ ವರ್ಷದ ಹಿನ್ನಲೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’’ ಎಂದು ನಾಮಕರಣ ಮಾಡುವುದು ಹಾಗೂ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಭವ್ಯವಾದ ಪ್ರತಿಮೆ ಸ್ಥಾಪನೆ ಜೊತೆಗೆ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಉನ್ನತೀಕರಣಗೊಳಿಸಬೇಕೆಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿ ಮನವಿ ಮಾಡಿದರು.
ನವದೆಹೆಲಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಯುದ್ಧ ಸಾರಿ ಗೆಲುವು ಸಾಧಿಸಿದ ಮೊದಲ ಮಹಿಳೆಯಾಗಿದ್ದಾರೆ. ಅವರ ತ್ಯಾಗ ಬಲಿದಾನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಹಾಗೂ ಅವರ ವಿರೋಚಿತ ಕಾರ್ಯಗಳನ್ನು ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡುವುದರ ಜೊತಕವಾಗಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭವ್ಯವಾದ ಪ್ರತಿಮೆ ಸ್ಥಾಪನೆ ಮಾಡುವ ಮೂಲಕ ಕರ್ನಾಟಕ ಜನತೆ ಉತ್ತಮ ಕೊಡುಗೆ ನೀಡಬೇಕೆಂದು ವಿನಂತಿಸಿದರು.
ನನ್ನ ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಸಚಿವರು ಈ ವಿಷಯವನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಈಗಾಗಲೇ ನಾವು ಸಿದ್ದತೆಗಳನ್ನು ಮಾಡುತ್ತಿದ್ದೇವೆ. ಆದಷ್ಟು ಬೇಗ ಸಚಿವ ಸಂಪುಟದಲ್ಲಿ ಮಂಡನೆ ಮಾಡಿ ಅನುಮೋದನೆ ಪಡೆಯಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಹಾಗೂ ತೆಲಂಗಾಣ ರಾಜ್ಯದ ಪ್ರಭಾರಿ ಅಭಯ ಪಾಟೀಲ ಉಪಸ್ಥಿತರಿದ್ದರು.