ಶ್ರೀನಗರ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ.
ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಭಾರತೀಯ ವಾಯುಪಡೆಯು (ಐಎಎಫ್) ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದಿದೆ. ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ಶ್ರೀನಗರ ವಿಮಾನ ನಿಲ್ದಾಣವು ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದೆ. ವಿಮಾನಗಳ ಸಂಚಾರ, ಲ್ಯಾಂಡಿಂಗ್ ಅನ್ನು ನಿಯಂತ್ರಿಸುತ್ತದೆ. ವಾಯುಪ್ರದೇಶವನ್ನು ಹೊರತುಪಡಿಸಿ ಅಗ್ನಿಶಾಮಕ, ಎಲ್ಲಾ ವಾಯು ಸುರಕ್ಷತಾ ಕಾರ್ಯವಿಧಾನಗಳನ್ನು ಸಹ ನಿಯಂತ್ರಿಸುತ್ತದೆ ಎಂದು ಮೂಲಗಳು ತಿಳಿಸಿವೆ.
ಸದ್ಯದ ಮಟ್ಟಿಗೆ ಶ್ರೀನಗರ ಕೇವಲ ನಾಗರಿಕ ವಿಮಾನ ನಿಲ್ದಾಣವಲ್ಲ. ಬದಲಾಗಿ ಇದು ಒಂದು ಕಾರ್ಯತಂತ್ರದ ನೆಲೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನದ ಮೇಲೆ ಭಾರತದ ದಾಳಿಯ ನಂತರ ಹಲವಾರು ವಿಮಾನ ನಿಲ್ದಾಣಗಳು ಮುಚ್ಚಲ್ಪಟ್ಟಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ರದ್ದುಗೊಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡಿಗಢ, ಧರ್ಮಶಾಲಾ, ಲೇಹ್ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ ಎಂದು ತಿಳಿದುಬಂದಿದೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದ್ದು, ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು 9 ಕಡೆಗಳಲ್ಲಿ ದಾಳಿ ನಡೆಸಿದೆ.