ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿ ಜೋರಾಗಿದೆ. ಇದರಿಂದ ಜನ ತಮ್ಮ ದೈನಂದಿನ ಜೀವನ ನಡೆಸಲು ತುಸು ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದಿಂದ ರಾಜ್ಯದ ವಿವಿಧೆಡೆ ತಾಪಮಾನ ಕುಸಿಯುತ್ತಿದ್ದು, ಮುಂದಿನ ಐದು ದಿನಗಳಲ್ಲಿ ಕನಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುವ ಸಂಭವವಿದ್ದು, ಮುಂಜಾನೆ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿತ್ತು.
ಬೀದರ್ನಲ್ಲಿ ಕನಿಷ್ಠ ಉಷ್ಣಾಂಶವು 2.1 ಡಿಗ್ರಿ ಸೆಲ್ಸಿಯಸ್ನಷ್ಟು ಕುಸಿತವಾಗಿ, 9.5 ಡಿಗ್ರಿ ಸೆಲ್ಸಿಯಸ್ ವರದಿಯಾಗಿತ್ತು. ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ 9.8 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿತ್ತು. ಕರಾವಳಿ ಹೊರತುಪಡಿಸಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಉಷ್ಣಾಂಶ ಕುಸಿತವಾಗಿತ್ತು ಎಂದು ಇಲಾಖೆ ತಿಳಿಸಿದೆ.


