ಬೆಳಗಾವಿ: ಜಿಲ್ಲೆಯಲ್ಲಿ ಕನ್ನಡ ಭಾಷೆಯ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಶ್ರಮ ವಹಿಸಬೇಕು. ಪ್ರತಿನಿತ್ಯ ಭಾಷೆ ಬಳಕೆ, ಕನ್ನಡ ನಾಮಫಲಕ ಅಳವಡಿಕೆ, ಕನ್ನಡಲ್ಲಿ ಪತ್ರ ವ್ಯವಹಾರ ಸೇರಿದಂತೆ ಗಡಿಭಾಗದಲ್ಲಿ ಕನ್ನಡ ಭಾಷೆ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಜು.೧೦) ನಡೆದ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಇತ್ತೀಚಿಗೆ ಶೈಕ್ಷಣಿಕವಾಗಿ ಕನ್ನಡ ಹಿಂದೆ ಉಳಿದಿರುವುದು ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರತಿಯೊಬ್ಬರು ಭಾಷಾ ಉಳಿವಿಗೆ ಕಾನೂನಾತ್ಮಕವಾಗಿ ಹೋರಾಟ ನಡೆಸಬೇಕಿದೆ. ಭಾಷೆ ಉಳಿವಿಗೆ ನಿರಂತರ ಭಾಷಾ ಬಳಕೆ ಮಾಡುವುದು ಕಡ್ಡಾಯವಾಗಿದೆ ಎಂದರು.
ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಹೆಚ್ಚು ಒತ್ತು ನೀಡಬೇಕು.
ಎಲ್ಲರೂ ಇತರೆ ಭಾಷೆಗೆ ಗೌವರವಿಸುವುದರು ಜೊತೆಗೆ ಕನ್ನಡ ಭಾಷೆ ಅನುಷ್ಠಾನಕ್ಕೆ ಜೈ ಜೋಡಿಸಬೇಕು. ಭಾಷೆ ಉಳಿವಿಗೆ ಕಡ್ಡಾಯವಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಸಾಮಾಜಿಕವಾಗಿ ಎಲ್ಲರೂ ಬಳಕೆ ಸಕ್ರಿಯವಾಗಬೇಕು.
ಪ್ರತಿ ಇಲಾಖೆಯಲ್ಲಿ ಕನ್ನಡ ಭಾಷೆ ಬಳಕೆ ಮಾಡಬೇಕು. ಶೇಕಡಾ 25% ರಷ್ಟು ಜನರು ರಾಜ್ಯದಲ್ಲಿ ಕನ್ನಡ ಭಾಷೆ ಬಳಸುವುದಿಲ್ಲ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ವರ್ಷಕ್ಕೆ ಮೂರು ಬಾರಿ ಸಭೆ ನಡೆಸಬೇಕು. ಕನ್ನಡಪರ ಸಂಘಟನೆ-ಸಂಘ ಸಂಸ್ಥೆಗಳ ಜೊತೆಗೆ ಕನ್ನಡ ಭಾಷೆ ಬಳಕೆ, ಭಾಷಾ ಅನುಷ್ಠಾನ ಸಮಸ್ಯೆಗಳನ್ನು ಆಲಿಸಿ, ಸ್ಪಂದಿಸಬೇಕು ಎಂದು ಹೇಳಿದರು.
ಗಡಿ ಭಾಗದಲ್ಲಿ ಕನ್ನಡ ಶಿಕ್ಷಕರ ನೇಮಿಸಲು ಕ್ರಮ ವಹಿಸಿ:
ಖಾನಾಪುರ ತಾಲೂಕು ಸೇರಿಯಂತೆ ಗಡಿ ಭಾಗದ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇದೆ. ಕನ್ನಡಲ್ಲಿ ಅನುತ್ತೀರ್ಣ ಹೊಂದಿರುವ ವಿದ್ಯಾರ್ಥಿಗಳ ಅಂಕಿ ಅಂಶಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಅಂತಹ ಪ್ರದೇಶಗಳಲ್ಲಿ ಕನ್ನಡವನ್ನು ನೆಲೆಯೂರುವ ನಿಟ್ಟಿನಲ್ಲಿ ಕನ್ನಡ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಕನ್ನಡಲ್ಲಿ ಅನುತ್ತೀರ್ಣ ಹೊಂದಿರುವ ವಿದ್ಯಾರ್ಥಿಗಳ ಕಾರಣ ತಿಳಿದುಕೊಂಡು ಅಂತವರಿಗೆ ಕನ್ನಡ ಕಲಿಕೆಯಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಡಾ.ಪುರುಷೋತ್ತಮ ಬಿಳಿಮಲೆ ಸೂಚಿಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ
ವಿದ್ಯಾರ್ಥಿಗಳು ಶೇಕಡಾ ೨೨% ಮಾತೃ ಭಾಷೆಯಲ್ಲಿ ಅನುತ್ತೀರ್ಣ ಹೊಂದಿದ್ದಾರೆ. ಇದಕ್ಕೆ ಸೂಕ್ತ ಕಾರಣಗಳನ್ನು ಗುರುಸಿ ಕನ್ನಡ ಭಾಷಾ ಜ್ಞಾನ ಪ್ರತಿ ಮಕ್ಕಳಲ್ಲಿ ಬರಬೇಕು ಮತ್ತು ಕನ್ನಡ ಶಿಕ್ಷಕರನ್ನು ನೇಮಕಮಾಡಿಕೊಂಡು ವಿದ್ಯಾರ್ಥಿಗಳಲ್ಲಿ ಕನ್ನಡ ಜ್ಞಾನ ವೃದ್ಧಿಯಾಗಲು ಶ್ರಮ ವಹಿಸಬೇಕು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಸಲಹೆ:
ಸರ್ಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಶೇಕಡಾ ೬೦% ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸುವುದಿಲ್ಲ. ಪ್ರತಿಯೊಬ್ಬರು ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಾರೆ. ಮೊದಲು ಸರ್ಕಾರಿ ಅಧಿಕಾರಿಗಳು, ನೌಕರರು ಇದನ್ನು ಬದಲಾಯಿಸಿಕೊಂಡಲ್ಲಿ, ಇನ್ನಷ್ಟು ಪರಿಣಾಮಕಾರಿಯಾಗಿ ಕನ್ನಡ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.
ಅಂಗನವಾಡಿ ಶಾಲೆಗಳಲ್ಲಿ ಕನ್ನಡ ಶಿಕ್ಷಣ ಕಡ್ಡಾಯವಾಗಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಮಕ್ಕಳೊಂದಿಗೆ ಕಡ್ಡಾಯವಾಗಿ ಕನ್ನಡದಲ್ಲೇ ಮಾತನಾಡಬೇಕು. ಈ ಕುರಿತು ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಸೂಚಿಸಬೇಕು ಎಂದು ನಿರ್ದೇಶನ ನೀಡಿದರು.
ಕನ್ನಡ ನಾಮಫಲಕ ಕಡ್ಡಾಯ:
ಸಹಕಾರಿ ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಲು ಸೂಚಿಸಬೇಕು. ಅಂತಹ ಸಂಘ ಸಂಸ್ಥೆಗಳ ನೋಟಿಸ್ ನೀಡಬೇಕು. ಕೆ.ಡಿ.ಪಿ ಸಭೆಗಳಲ್ಲಿ ಇಲಾಖೆಗಳಲ್ಲಿ ಕನ್ನಡ ಅನುಷ್ಠಾನ ವಿಷಯ ಚರ್ಚೆ ಕುರಿತು ಪ್ರಥಮವಾಗಿ ಆದ್ಯತೆ ನೀಡಬೇಕು. ಈ ಕುರಿತು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಾಧಿಕಾರದಿಂದ ಸೂಚನೆ ಬರೆಯಲಾಗಿದೆ.
ಆರೋಗ್ಯ ಇಲಾಖೆಯಿಂದ ಮರಣೋತ್ತರ ವರದಿ ಕನ್ನಡಲ್ಲಿ ನೀಡಬೇಕು. ವೈದ್ಯರು ಸಹ ಕನ್ನಡ ಭಾಷೆಯ ಸಾಫ್ಟ್ ವೇರ್ ಬಳಕೆ ಮಾಡಬೇಕು. ಅದೇ ರೀತಿಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ವೈದ್ಯಕೀಯ ಔಷಧಿ ಚಿಟ್ಟಿ ಬರೆಯಲು ಕನ್ನಡ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ಎಲ್ಲ ರಾಷ್ಟ್ರೀಕೃತ ಬ್ಯಾಂಕ್, ಇತರೆ ಬ್ಯಾಂಕ್ ಗಳಲ್ಲಿ ನೌಕರರು ಕನ್ನಡ ಕಡ್ಡಾಯವಾಗಿ ಬಳಸಬೇಕು. ನಾಮಫಲಕ, ಸೂಚನಾ ಫಲಕ, ಹಣ ಜಮೆ, ವರ್ಗಾವಣೆ ರಸೀದಿ ಕನ್ನಡಲ್ಲೇ ಇರಬೇಕು. ಈ ಕುರಿತು ಎಲ್ಲ ಬ್ಯಾಂಕ್ ಗಳಿಗೆ ಸೂಚನೆ ನೀಡಬೇಕು ಎಂದರು.
ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ:
ಖಾಸಗಿ ಆಂಗ್ಲಮಾಧ್ಯಮ, ಮರಾಠಿ ಶಾಲೆಗಳಲ್ಲಿ ನಾಡಗೀತೆ ಬಳಕೆ ಮಾಡುತ್ತಿಲ್ಲ ಎಂದು ದೂರುಗಳು ಬರುತ್ತಿವೆ. ಅಂತಹ ಶಾಲೆಗಳಿಗೆ ನೋಟಿಸ್ ನೀಡಬೇಕು. ಒಂದುವೇಳೆ ನಾಡಗೀತೆ ಹಾಡದೇ ಇದ್ದಲ್ಲಿ ಅಂತಹ ಶಾಲೆಗಳನ್ನು ರದ್ದುಪಡಿಸಲು ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಸ್ಥಳೀಯ ನ್ಯಾಯಾಲಯಗಳಲ್ಲಿ ವಕೀಲರು ಕನ್ನಡದಲ್ಲಿಯೇ ವಾದ , ತೀರ್ಪು ಬರಬೇಕು ಎಂದು ನಿರ್ದೇಶನ ನೀಡಲು ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದರು.
ಶಾಂತಿ-ಸುವ್ಯವಸ್ಥೆ ಕನ್ನಡ ಅನುಷ್ಠಾನ:
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ,
ಜಿಲ್ಲೆಯಲ್ಲಿ ಶಾಂತಿ ಕಾಪಾಡಿಕೊಂಡು, ಕನ್ನಡ ನಾಮಫಲಕಗಳ ಅಳವಡಿಕೆಗೆ ಈಗಾಗಲೇ ಸೂಚನೆ ನೀಡಲಾಗಿದೆ. ಒಂದುವೇಳೆ ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನೂನಾತ್ಮಕವಾಗಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಕೆಲವು ಸೂಕ್ಷ್ಮತೆಗಳಿವೆ ಅವುಗಳನ್ನೆಲ್ಲ ಗಮನದಲ್ಲಿಟ್ಟುಕೊಂಡು, ಸರ್ಕಾರಿ ಆದೇಶದಂತೆ ಮಹಾನಗರ ಪಾಲಿಕೆ, ಪುರಸಭೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದೆ ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಜಿಲ್ಲೆಯಲ್ಲಿ ಆಡಳಿತ ನಡೆದಿದೆ. ಕನ್ನಡಪರ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಳ್ಳದಂತೆ ಪ್ರಾಧಿಕಾರದ ವತಿಯಿಂದ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು.
ಕನ್ನಡ ಉಳಿಸಿ ಬೆಳೆಸಲು ಪ್ರಾಥಮಿಕ ಹಂತದಿಂದ ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸಬೇಕು. ಬೆಳವಣಿಗೆ ಹಂತದಲ್ಲಿ ಮಕ್ಕಳಿಗೆ ಕನ್ನಡ ಭಾಷಾ ಜ್ಞಾನ ನೀಡಬೇಕು ಎಂದು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸಲಹೆ ನೀಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ಮಾತನಾಡಿ ಎಲ್ಲ ಸರ್ಕಾರಿ ಇಲಾಖೆಗಳು ಕನ್ನಡಪರ ಸಂಘಟನೆ, ಹೋರಾಟಗಾರ ಸಮಸ್ಯೆಗಳನ್ನು ಆಲಿಸಬೇಕು. ಕನ್ನಡಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಎದುರಾದಲ್ಲಿ ಅಂತವರನ್ನು ಬರಮಾಡಿಕೊಂಡು ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಕಿತ್ತೂರು ಉತ್ಸವದ ಕುರಿತು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಹೆಸರು “ಕಿತ್ತೂರು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ” ಎಂದು ಮರು ನಾಮಕರಣ ಮಾಡಲು ಕುಲಪತಿಗಳಿಗೆ ಪತ್ರ ಬರೆಯಲಾಗಿತ್ತು ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿರುವುದಿಲ್ಲ. ಇನ್ನಾದರೂ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಸಿಂಡಿಕೇಟ್ ಸಭೆ ಕರೆದು ಬದಲಾವಣೆಗೆ ಮುಂದಾಗಬೇಕು ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಾಮ ನಿರ್ದೇಶತ ಸದಸ್ಯರು, ದಾಕ್ಷಾಯಿಣಿ ಹುಡೇದ, ಕನ್ನಡಪರ ಹೋರಾಟಗಾರ, ಗಡಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಅಶೋಕ ಚಂದರಗಿ, ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರವ್ ಬೊರಸೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಮಹಾನಗರ ಪಾಲಿಕೆ ಆಯುಕ್ತೆ ಶುಭ.ಬಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ್ ನಾಯಕ, ತಹಶೀಲ್ದಾರ್ ಬಸವರಾಜ ನಾಗರಾಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಹೆಚ್.ಡಿ ಕೊಳೆಕರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿಸಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.