ಬೆಳಗಾವಿ: ಮೈಸೂರು ಮಾನಸ ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಚಿವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ದಿನಾಂಕ:27.03.2025 ರಂದು ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ತಮಗೆ ಹಾಗೂ
ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ. ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ
ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದಂತಹ ಹೊಣೆಗಾರಿಕೆ ನನ್ನ ಮೇಲಿದ್ದು, ಇದಕ್ಕೆ ಇನ್ನೂ ಹೆಚ್ಚಿನ
ಕಾಲಾವಕಾಶದ ಅವಶ್ಯಕತೆ ಇರುತ್ತದೆ. ಈ ಹಿನ್ನಲೆಯಲ್ಲಿ, ತಾವು ಪ್ರೀತಿಪೂರ್ವಕವಾಗಿ ತಮ್ಮ ವಿಶ್ವವಿದ್ಯಾನಿಲಯದ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ ಎಂದು ತಿಳಿಸಿದ್ದಾರೆ.
ನನ್ನ ಈ ನಿರ್ಧಾರವನ್ನು ಅನ್ಯಥಾ ಭಾವಿಸದೇ, ನಾನು ಮನಸೋಯಿಚ್ಛೆ ಕೈಗೊಂಡಿರುವ ನಿರ್ಧಾರವಾಗಿದ್ದು, ತಾವು ಈ ನಿರ್ಧಾರವನ್ನು ಸ್ವಾಗತಿಸುತ್ತೀರೆಂದು ಭಾವಿಸುತ್ತೇನೆ ಎಂದು ಮೈಸೂರು ಮಾನಸ ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ರವಾನಿಸಿದ ಪತ್ರದಲ್ಲಿ ತಿಳಿಸಿದ್ದಾರೆ.