ಖಾನಾಪುರ: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಖಾನಾಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಮನವಿ ಮಾಡಲಾಯಿತು.
ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು. ಡಿ. ದೇವರಾಜ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ,
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರ ಬಾಲಕ / ಬಾಲಕಿಯರ ವಸತಿ ನಿಲಯ, ಕನ್ನಡ ಭವನ ನಿರ್ಮಾಣ, ಮುರಾರ್ಜಿ ದೇಸಾಯಿ ವಸತಿ ಶಾಲೆ, ಎಪಿಎಂಸಿ ಪ್ರದೇಶದಲ್ಲಿನ ಅಪೂರ್ಣ ಸಮುದಾಯ ಭವನ ಪೂರ್ಣಗೊಳಿಸಲು ಅನುದಾನ, ಕಸಬಾ ನಂದಗಡ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ಮಾಡುವ ಕುರಿತು ವಿನಂತಿಸಿದರು.
ವ್ಯಾಪಕ ಮಳೆಯಿಂದ ಹಾನಿಗೊಳಗಾದ ಸರಕಾರಿ ಕಟ್ಟಡಗಳು, ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ರಸ್ತೆ ಅಭಿವೃದ್ಧಿಗೆ ₹10 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ವಿನಂತಿ ಮಾಡಲಾಯಿತು ಎಂದು ಶಾಸಕ ವಿಠ್ಠಲ ಹಲಗೇಕರ ಅವರು ತಿಳಿಸಿದ್ದಾರೆ.


