ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮುತ್ತಪ್ಪ ಶ್ರೀಶೈಲ ಮುಗಳಖೋಡ (46) ಮತ್ತು ರಾಜೇಶ್ವರಿ ಮುಗಳಖೋಡ (36) ಮೃತಪಟ್ಟ ದಂಪತಿ. ಕಬ್ಬಿನ ಗದ್ದೆಯಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ವಿದ್ಯುತ್ ತಂತಿ ಏಕಾಏಕಿ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಪಾಯಕಾರಿ ರೀತಿಯಲ್ಲಿ ಜೋತುಬೀಳುತ್ತಿದ್ದ ವಿದ್ಯುತ್ ತಂತಿಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಹೆಸ್ಕಾಂ ಬೇಜವಾಬ್ದಾರಿತನದಿಂದಾಗಿಯೇ ದಂಪತಿಗಳು ಬಲಿಯಾಗಿದ್ದಾರೆ ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರೋಶ ಮುಗಿಲುಮುಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ಮೂಡಲಗಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.