ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಿಳಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮೊನ್ನೆಯಷ್ಟೇ (ಮೆ 28) ರಾಜೀನಾಮೆ ನೀಡಿದ್ದಾರೆ. ಇಂದು (ಶನಿವಾರ) ಸಂಜೆ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಈಗಾಗಲೇ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೂಲಗಳ ಪ್ರಕಾರ, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಕುರಿತು ರಾಜ್ಯಪಾಲರೊಂದಿಗೆ ಅನೌಪಚಾರಿಕವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.
