ಬೆಳಗಾವಿ: ಬೆಳಗಾವಿಯ ಡಾ. ಕಿರಣ ಮಾಳವದೆ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಿಂದ "ಎ ಸೈಂಟೊಮೆಟ್ರಿಕ್ ಸ್ಟಡಿ ಆಫ್ ನೆಫ್ರಾಲಜಿ ವಿತ್ ಸ್ಪೆಷಲ್ ರೆಫರೆನ್ಸ್ ಟು ಜಿ-7 ಕಂಟ್ರೀಸ್ ಆ್ಯಂಡ್ ಇಂಡಿಯಾ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ.
ಇವರು ತಮ್ಮ ಸಂಶೋಧನಾ ಕಾರ್ಯವನ್ನು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ. ಮಾರಣ್ಣ ಓ. ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಡಾ. ಕಿರಣ ಮಾಳವದೆ ಅವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಯುಜಿಸಿ-ನೆಟ್ (UGC-NET) ಹಾಗೂ ಕೆ-ಸೆಟ್ (K-SET) ಪರೀಕ್ಷೆಗಳಲ್ಲಿ ಅರ್ಹತೆ ಗಳಿಸಿದ್ದಾರೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದಲ್ಲಿ ಹಲವು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದು, ವಿವಿಧ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಂಶೋಧನಾ ಲೇಖನಗಳನ್ನು ಮಂಡಿಸಿದ್ದಾರೆ.
ಪ್ರಸ್ತುತ ಅವರು ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (KLE AHER)ಅಂಗಸಂಸ್ಥೆಯಾದ ಕೆಎಲ್ಇ ಕಾಲೇಜ್ ಆಫ್ ಫಾರ್ಮಸಿ, ಬೆಳಗಾವಿಯಲ್ಲಿ ಗ್ರಂಥಪಾಲಕರಾಗಿ ಹಾಗೂ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (KALA), ಬೆಳಗಾವಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬದ ಸದಸ್ಯರು, ಮಾರ್ಗದರ್ಶಕರು, ಕೆಎಲ್ಇ ಸಂಸ್ಥೆಯ ಪ್ರಾಚಾರ್ಯರು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.