ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆಯ ಐದು ವರ್ಷಗಳ ಅವಧಿಯು ಗುರುವಾರ ಮಧ್ಯರಾತ್ರಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ರಾಜ್ಯಪಾಲರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ರಾಜಭವನವು ಬುಧವಾರವೇ ಸಿದ್ಧಪಡಿಸಿದ್ದ ಪತ್ರವನ್ನು ಗುರುವಾರ ಸಂಜೆ ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ. ಅದರಲ್ಲಿ, “ಭಾರತದ ಸಂವಿಧಾನದ ವಿಧಿ 174 (2)(ಬಿ) ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ನಾನು ಮೇ 7, 2026 ರಿಂದ ಜಾರಿಗೆ ಬರುವಂತೆ ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸುತ್ತಿದ್ದೇನೆ ಎಂದು ತಿಳಿಸಲಾಗಿದೆ.
ಮಮತಾ ಹಠ ಮತ್ತು ಸಂವಿಧಾನಾತ್ಮಕ ಬಿಕ್ಕಟ್ಟು
ಸಾಮಾನ್ಯವಾಗಿ ಚುನಾವಣೆಯಲ್ಲಿ ಸೋತ ನಂತರ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ, ಹೊಸ ಸರ್ಕಾರ ಬರುವವರೆಗೆ ‘ಹಂಗಾಮಿ’ (Caretaker) ಸರ್ಕಾರವಾಗಿ ಮುಂದುವರಿಯುವುದು ಸಂಪ್ರದಾಯ. ಆದರೆ ಮಮತಾ ಬ್ಯಾನರ್ಜಿ ಅವರು, “ನಾನು ಸೋತಿಲ್ಲ, ಈ ಫಲಿತಾಂಶ ಲೂಟಿಯ ಫಲ” ಎಂದು ವಾದಿಸಿ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಭಾರತದ ಚುನಾವಣಾ ಇತಿಹಾಸದಲ್ಲೇ ಇಂತಹ ನಡೆ ಇದೇ ಮೊದಲು ಎನ್ನಲಾಗಿದೆ.
ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಬಿಜೆಪಿ, ಮಮತಾ ಬ್ಯಾನರ್ಜಿ ಅವರನ್ನು ಹಂಗಾಮಿ ಮುಖ್ಯಮಂತ್ರಿಯಾಗಿಯೂ ಆಗಿಯೂ ಮುಂದುವರಿಯಲು ಬಿಡಬಾರದು, ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿತ್ತು.
ಬಿಜೆಪಿ ಶನಿವಾರದಂದು ಹೊಸ ಸರ್ಕಾರ ರಚಿಸಲು ಸಿದ್ಧತೆ ನಡೆಸಿದ್ದು, ಅಲ್ಲಿಯವರೆಗೆ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಗೊಂದಲ ಸೃಷ್ಟಿಯಾಗಿತ್ತು.
ಇದೇ ವೇಳೆ, ಮೂರು ಅವಧಿಯ ಆಡಳಿತವನ್ನು ಅಂತ್ಯಗೊಳಿಸಿದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರುವುದಾಗಿ ತೃಣಮೂಲ ಕಾಂಗ್ರೆಸ್ ಹೇಳಿದೆ.
ರಾಜ್ಯಪಾಲರ ಈ ನಿರ್ಧಾರದಿಂದಾಗಿ ಮಮತಾ ಬ್ಯಾನರ್ಜಿ ಅವರ ಕೊನೆಯ ಪಟ್ಟು ವಿಫಲವಾದಂತಾಗಿದೆ. ಈಗ ಎಲ್ಲರ ಗಮನ ಶನಿವಾರ ನಡೆಯಲಿರುವ ಬಿಜೆಪಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭದತ್ತ ನೆಟ್ಟಿದೆ.
