ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬಿಜೆಪಿ ನಾಯಕ ಡಿ. ಎನ್. ಜೀವರಾಜ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬುಧವಾರ ಮಧ್ಯಾಹ್ನ 3:30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಜೀವರಾಜ ಅವರಿಗೆ ಪ್ರಮಾಣವಚನ ಬೋಧಿಸಿದರು. ಜೀವರಾಜ ಅವರು ಶೃಂಗೇರಿಯ ಶಾರದಾಂಬೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸಭೆ ವಿಪಕ್ಷದ ನಾಯಕ ಆರ್ ಅಶೋಕ ಹಾಗೂ ಮತ್ತು ವಿಧಾನ ಪರಿಷತ್ತಿನ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
2023ರ ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಟಿ ಡಿ ರಾಜೇಗೌಡ ವಿರುದ್ಧ 201 ಮತಗಳ ಅಂತರದಿಂದ ಸೋತಿದ್ದ ಜೀವರಾಜ ಅಂಚೆ ಮತಗಳನ್ನು ಮರುಎಣಿಕೆ ಮಾಡಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆಯ ನಂತರ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರುಎಣಿಕೆ ಮಾಡಲಾಯಿತು. ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಪಡೆದಿದ್ದ 569 ಅಂಚೆ ಮತಗಳಲ್ಲಿ 318 ಮತಗಳು ಅಸಿಂಧು ಎಂದು ಘೋಷಿಸಲ್ಪಟ್ಟಿದ್ದು, ಇದರಿಂದ ಫಲಿತಾಂಶದಲ್ಲಿ ಬದಲಾವಣೆಯಾಗಿದೆ. ಇದರ ಪರಿಣಾಮವಾಗಿ ಬಿಜೆಪಿಯ ಡಿ.ಎನ್. ಜೀವರಾಜ ಅವರು 52 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
