ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ (ಜೂನ್ 3) 55 ದಿನಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬರುವ ಲಕ್ಷಣ ಕಾಣುತ್ತಿದೆ.
ಶಿವಕುಮಾರ್ ಅವರು ಸೋಮವಾರ (ಜುಲೈ 27) ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಸೇರಲಿರುವ ಶಾಸಕರ ಪಟ್ಟಿಗೆ ಒಪ್ಪಿಗೆ ಪಡೆಯುವ ಸಾಧ್ಯತೆಯಿದೆ.
ಶಿವಕುಮಾರ್ ಜೊತೆಗೆ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡಾ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆ ವಿಷಯವಾಗಿ ವರಿಷ್ಠರ ಜೊತೆ ಮಾತುಕತೆ ನಡೆಸಲು ತಿಂಗಳ ಅಂತರದಲ್ಲಿ ಮೂರನೇ
ಬಾರಿಗೆ ಈ ನಾಯಕರು ದೆಹಲಿ ವಿಮಾನ ಹತ್ತುತ್ತಿದ್ದಾರೆ.
ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರ ಜೊತೆ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸೋಮವಾರ ಸಂಜೆ ಸಭೆ ನಡೆಸಲಿದ್ದಾರೆ. ಹೈಕಮಾಂಡ್ ನಾಯಕರನ್ನು ಶಿವಕುಮಾರ್ ಮತ್ತು ಇತರ ನಾಯಕರು ಮಂಗಳವಾರ ಭೇಟಿ ಮಾಡಿ, ನನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯುವ ಸಾಧ್ಯತೆ ಇದೆ. ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ಚರ್ಚಿಸಿ, ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ನಾಯಕರು ಅಂತಿಮಗೊಳಿಸಲಿದ್ದಾರೆ. ಗುರುವಾರದೊಳಗೆ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಈ ಬೆಳವಣಿಗೆಗಳ ನಡುವೆ, ಸಚಿವ ಸ್ಥಾನ ಆಕಾಂಕ್ಷಿಗಳು ಕೊನೆಯ ಕ್ಷಣದ ಲಾಬಿ ನಡೆಸಲು ಮುಂದಾಗಿದ್ದಾರೆ. ಅಶೋಕ ಪಟ್ಟಣ, ಬಸವರಾಜ ರಾಯರಡ್ಡಿ, ಬಸನಗೌಡ ದದ್ದಲ್, ಹಂಪನಗೌಡ ಬಾದರ್ಲಿ, ಸುಧಾಮ್ ದಾಸ್, ಮಂಜುನಾಥ್ ಭಂಡಾರಿ, ಬಸನಗೌಡ ಬಾದರ್ಲಿ, ಶರಣುಗೌಡ ಬಯ್ಯಾಪುರ, ವಸಂತಕುಮಾರ್, ಪುಟ್ಟಣ್ಣ, ಗುಬ್ಬಿ ಶ್ರೀನಿವಾಸ್, ಎಂ.ಆರ್. ಸೀತಾರಾಂ, ಬಸವರಾಜ ಶಿವಣ್ಣನವರ್, ವಿಜಯಾನಂದ ಕಾಶಪ್ಪನವರ್ ಸೇರಿ ಹಲವರು ದೆಹಲಿಯತ್ತ ಮುಖ ಮಾಡಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ನಡೆದ ಕಾರಣ ಕಳೆದ ವಾರ ಸಂಪುಟ ವಿಸ್ತರಣೆ ಕುರಿತು ಚರ್ಚೆ ಸಾಧ್ಯವಾಗದೇ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತು ಬಿ.ಕೆ. ಹರಿಪ್ರಸಾದ್ ವಾಪಸಾಗಿದ್ದರು. ನೀಟ್ ಹೋರಾಟ ಅಂತ್ಯವಾಗಿರುವ ಕಾರಣ ರಾಹುಲ್ ಗಾಂಧಿ ಜೊತೆ ಸಂಪುಟ ವಿಸ್ತರಣೆಗೆ ಅನುಮತಿ ಪಡೆದು, ಸಚಿವರಾಗುವವರ ಪಟ್ಟಿಯನ್ನು ಅಂತಿಮಗೊಳಿಸಿ ಮೂವರು ನಾಯಕರೂ ವಾಪಸಾಗಲಿದ್ದಾರೆ.
ಯಾವುದೇ ಕ್ಷಣದಲ್ಲಿ ಸಂಪುಟ ವಿಸ್ತರಣೆ ಆಗಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದು, ಸಚಿವಾಕಾಂಕ್ಷಿಗಳಲ್ಲಿ ಆಶಾಭಾವ ಮೂಡಿಸಿದೆ. ಹೈಕಮಾಂಡ್ ನಾಯಕರ ಭೇಟಿ ಮತ್ತು ಸುಳಿವು ಸಿಗುತ್ತಿದ್ದಂತೆ ಸಚಿವಾಕಾಂಕ್ಷಿಗಳ ದಂಡು ಸಕ್ರಿಯವಾಗಿದೆ. 15ಕ್ಕೂ ಹೆಚ್ಚು ಕಿರಿಯ ಶಾಸಕರ ತಂಡ ಮುಖ್ಯಮಂತ್ರಿಯನ್ನು ಭೇಟಿಯಾಗಿ ಸಂಪುಟದಲ್ಲಿ ಹೊಸ ಮತ್ತು ಯುವ ಮುಖಗಳಿಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ.