ಬೆಳಗಾವಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದು ಮತ ಎಣಿಕೆ ಹೊರಬಿದ್ದಿದೆ. ಅಷ್ಟರಲ್ಲೇ ಇದೀಗ ಮತ್ತೊಂದು ಚುನಾವಣೆ ಕಾವೇರತೊಡಗಿದೆ. ಈ ಚುನಾವಣೆಗೆ ಬಾರಿ ಹಣಾಹಣಿ ಏರ್ಪಟ್ಟಿದ್ದು ಅತಿರಥ-ಮಹಾರಥ ನಾಯಕರು ಈ ಚುನಾವಣೆಗೆ ಸ್ಪರ್ಧೆ ನಡೆಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಆಯಾ ಪಕ್ಷಗಳು ಅವರಿಗೆ ಮಣೆ ಹಾಕುತ್ತವೋ ಕಾದು ನೋಡಬೇಕಾಗಿದೆ. ಒಟ್ಟಾರೆ ಈ ಚುನಾವಣೆ ಭಾರೀ ಕುತೂಹಲ ಕೆರಳಿಸಿರುವುದು ಸತ್ಯ.
ಮುಂದಿನ ತಿಂಗಳು ರಾಜ್ಯಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆ ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯ ಮೂಲದ ನಾಯಕರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ವಕ್ತಾರೆ ಡಾ.ಅಂಜಲಿ ನಿಂಬಾಳ್ಕರ್ ಮತ್ತು ಇತರರು ಇದೀಗ ಲಾಬಿಗಿಳಿದಿದ್ದಾರೆ. ಡಾ. ಅಂಜಲಿ ನಿಂಬಾಳ್ಕರ್ ಅವರು ಸದ್ಯ ರಾಜ್ಯದ ರಾಜಕಾರಣಕ್ಕಿಂತ ದೆಹಲಿ ಮಟ್ಟದ ರಾಜಕಾರಣದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲು ಆರಂಭಿಸಿರುವುದು ವಿಶೇಷವಾಗಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವಲ್ಲಿ ಅವರು ಕಳೆದ ಕೆಲ ತಿಂಗಳುಗಳಿಂದ ದೆಹಲಿಯಲ್ಲಿ ಬಿಡು ಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರ ಕೃಪಾಕಟಾಕ್ಷಕ್ಕೆ ಪಾತ್ರರಾಗಿರುವ ಅವರು ಈಗಾಗಲೇ ರಾಹುಲ್ ಗಾಂಧಿ ಅವರ ಹಲವಾರು ಕಾರ್ಯಕ್ರಮಗಳಲ್ಲಿ ಅವರ ಜೊತೆ ಜೊತೆಗೆ ಮುಂಚೂಣಿಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮಹಿಳಾ ಕೋಟಾದಡಿ ಡಾ. ಅಂಜಲಿ ನಿಂಬಾಳ್ಕರ್ ಅವರು ತಮ್ಮ ಹಕ್ಕು ಸ್ಥಾಪನೆ ಮಾಡಲಿದ್ದು ರಾಜ್ಯಸಭೆಗೆ ಪ್ರವೇಶಿಸಿಯೆ ತೀರುವ ನಿಟ್ಟಿನಲ್ಲಿ ಮನದಿಂಗಿತ ಹೊಂದಿದ್ದಾರೆ.
ರಾಜ್ಯಸಭೆಗೆ ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದರಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದ್ದು ಮೂರು ಅಭ್ಯರ್ಥಿಗಳ ಪೈಕಿ ಮಹಿಳೆಯೊಬ್ಬರಿಗೆ ಅವಕಾಶ ಸಿಗಬೇಕು ಎಂದು ಕಾಂಗ್ರೆಸ್ ಪಕ್ಷ ತೀರ್ಮಾನ ಕೈಗೊಂಡರೆ ಹಿರಿಯ ನಾಯಕಿ ಡಾ.ಅಂಜಲಿ ನಿಂಬಾಳ್ಕರ್ ಅವರ ಅದೃಷ್ಟ ಖುಲಾಯಿಸುವ ಸಾಧ್ಯತೆ ಇದೆ.
ಈ ನಡುವೆ ಮಹದಾಯಿ, ಕಾವೇರಿ, ಕೃಷ್ಣಾ ಮುಂತಾದ ಅಂತಾರಾಜ್ಯ ಜಲ ವಿವಾದಗಳಲ್ಲಿ ಕರ್ನಾಟಕ ರಾಜ್ಯದ ಪರವಾಗಿ ವಾದ ಮಾಡುತ್ತಿರುವ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಮೋಹನ ಕಾತರಕಿ ಅವರು ರಾಜ್ಯಸಭೆ ಪ್ರವೇಶಿಸಲು ಮುಂದಾಗಿದ್ದಾರೆ. ಮೋಹನ ಕಾತರಕಿ ಅವರ ಪರವಾಗಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಒಲವು ತೋರಿದ್ದಾರೆ. ಜಲ ತಜ್ಞರಾಗಿರುವ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಹುಮ್ಮಸ್ಸಿನಲ್ಲಿದ್ದಾರೆ.
ಕರ್ನಾಟಕ ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ ನಲ್ಲಿ ಚುನಾವಣೆ ನಡೆಯಲಿದೆ. ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಾಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮತ್ತು ಕೆ.ನಾರಾಯಣ ತಮ್ಮ ಆರು ವರ್ಷಗಳ ಅವಧಿ ಮುಕ್ತಾಯಗೊಳಿಸುತ್ತಿರುವುದರಿಂದ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 140 ಸದಸ್ಯರ ಸನಿಹದಲ್ಲಿದೆ. ಹೀಗಾಗಿ 4 ಸ್ಥಾನಗಳ ಪೈಕಿ 3 ಸ್ಥಾನ ಗೆಲ್ಲುವಷ್ಟು ಸಂಖ್ಯಾ ಬಲ ಹೊಂದಿದೆ. ಇನ್ನೊಂದು ಸ್ಥಾನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಪಾಲಾಗಲಿದೆ. ಮಲ್ಲಿಕಾರ್ಜುನ ಖರ್ಗೆ ಮತ್ತೊಂದು ಅವರಿಗೆ ರಾಜ್ಯಸಭೆಗೆ ಪ್ರವೇಶ ಮಾಡುವುದು ಬಹುತೇಕ ಖಚಿತವಾಗಿದೆ.
65 ಶಾಸಕರನ್ನೊಳಗೊಂಡ ಬಿಜೆಪಿ ಮತ್ತು 19 ಶಾಸಕರನ್ನು ಹೊಂದಿರುವ ಜೆಡಿಎಸ್ ಮೈತ್ರಿಕೂಟದಿಂದ ದೇವೇಗೌಡರು ರಾಜ್ಯಸಭೆಗೆ ಹೋಗುವ ಸಾಧ್ಯತೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಕಾಳಜಿ ಹಾಗೂ ಪ್ರೀತಿ ಹೊಂದಿರುವುದರಿಂದ ದೇವೇಗೌಡರು ರಾಜ್ಯಸಭೆ ಪ್ರವೇಶಿಸುವ ಸಾಧ್ಯತೆ ಅಧಿಕ. ಬಿಜೆಪಿ ಮುಖಂಡರು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರನ್ನು ರಾಜ್ಯಸಭೆಗೆ ಕಳಿಸಲು ಆಸಕ್ತರಾಗಿದ್ದಾರೆ.
ಒಂದು ವೇಳೆ ಬಿಜೆಪಿ ಹಾಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನೇ ಮುಂದುವರಿಸುವ ಬಗ್ಗೆ ತೀರ್ಮಾನ ಕೈಗೊಂಡರೂ ಅಚ್ಚರಿ ಪಡಬೇಕಾಗಿಲ್ಲ.
ಬೆಳಗಾವಿ ಜಿಲ್ಲೆಯ ಪಾಲಿಗೆ ರಾಜ್ಯಸಭಾ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಬೆಳಗಾವಿ ಜಿಲ್ಲೆಯ ನಾಯಕರು ರಾಜ್ಯಸಭೆ ಪ್ರವೇಶಿಸಿದರೆ ಜಿಲ್ಲೆಗೆ ಮತ್ತಷ್ಟು ರಾಜಕೀಯ ಶಕ್ತಿ ಬರಲಿದೆ.
