ಬೆಳಗಾವಿ: ನಿಪ್ಪಾಣಿ ನಗರದ ಬಳಿ ಹಾದು ಹೋಗುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಧವಾರ ಮಧ್ಯಾಹ್ನ ಕುಸಿದಿದೆ. ಇದರಿಂದ ಸವಾರರು ಪರದಾಡುವಂತಾಗಿದೆ. ಕಾಮಗಾರಿ ಕಳಪೆಯಿಂದ ಕೂಡಿದ್ದು ಈ ಬಗ್ಗೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಸಿದ ಹೆದ್ದಾರಿ ಕಾಮಗಾರಿಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಇದು ನಾಲ್ಕು ಪಥದ ರಸ್ತೆಯಾಗಿದೆ. ಕೇಂದ್ರ ಸರಕಾರ ಆರು ಪಥದ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಿದೆ. ಎರಡು ವರ್ಷಗಳಿಂದ ಕಾಮಗಾರಿ ಜೋರಾಗಿ ನಡೆದಿದೆ.
ಸಹಸ್ರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆದಿರುವ ಕಾಮಗಾರಿ ಈಗ ಪೂರ್ಣಗೊಳ್ಳುವ ಮೊದಲೇ ಕುಸಿದಿದೆ.
ಶಾಸಕಿ ಶಶಿಕರ ಜೊಲ್ಲೆ ಕಾಮಗಾರಿ ವೀಕ್ಷಣೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ್ದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತರುವುದಾಗಿ ತಿಳಿಸಿದರು. ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಈ ರಾಷ್ಟ್ರೀಯ ಹೆದ್ದಾರಿಯನ್ನು ಮತ್ತೆ ನಿರ್ಮಾಣ ಮಾಡಬೇಕು ಎಂದು ಅವರು ಒತ್ತಾಯಿಸಿದರು.