ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ನೇಮಕ ಮಾಡಲಾಗಿದೆ. ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆಯೂ ಅದೇ ಹುದ್ದೆಗಳನ್ನು ನಿರ್ವಹಿಸಿದ್ದ ಪೊನ್ನಣ್ಣ ಮತ್ತು ದೇಶಪಾಂಡೆ ಅವರನ್ನು ಮತ್ತೆ ಮುಂದುವರಿಸಲಾಗಿದೆ. ಇಬ್ಬರಿಗೂ ಸಂಪುಟ ದರ್ಜೆಯ ಸ್ಥಾನಮಾನ ಸಿಗಲಿದೆ.
ಇತ್ತೀಚೆಗೆ, ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ಪ್ರಬಲ ಆಕಾಂಕ್ಷಿಗಳಾಗಿದ್ದ ಎ.ಎಸ್. ಪೊನ್ನಣ್ಣ ಮತ್ತು ಆರ್.ವಿ. ದೇಶಪಾಂಡೆ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ.