Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಸ್ತಿ ತೆರಿಗೆ ‘ಒಟಿಎಸ್’ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

11ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದ ಶಿವಕುಮಾರ್ ಅವರು, “ಈವರೆಗೂ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವಾರಿಯಾಗಿ 400 ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ. ಸರ್ವರ್ ಸಮಸ್ಯೆ ಹಾಗೂ ಮತ್ತೆ ಕೆಲವರು ಚೆಕ್ ನೀಡಿದ್ದು, ಜುಲೈ 31ರವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದರು.

“ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯವಾಗಿ ಗಾಬರಿಯಾಗುವುದು ಬೇಡ” ಎಂದು ಹೇಳಿದರು.

*ಬಿಜೆಪಿಯ ಪಾದಯಾತ್ರೆಯಲ್ಲಿ ವಿಷಯವೂ ಇಲ್ಲ, ಅರ್ಥವೂ ಇಲ್ಲ:*

ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಜನಾಂದೋಲನ ಯಾತ್ರೆ ಬಗ್ಗೆ ಕೇಳಿದಾಗ, “ಬಿಜೆಪಿಯ ಪಾದಯಾತ್ರೆಗೆ ಅರ್ಥ ಅಥವಾ ವಿಷಯ ಯಾವುದೂ ಇಲ್ಲ. ಅವರ ಪಾದಯಾತ್ರೆ ವಿಚಾರ ಏನು? ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದಾದರೂ ಹೊಸ ಹಗರಣಗಳಿದ್ದರೆ ಅವರು ಹೇಳಲಿ. ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರ. ಹೀಗಾಗಿ ನಾವು ಅವರ ಕಾಲದ ಹಗರಣಗಳ ಬಗ್ಗೆ, ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರತಿನಿತ್ಯ ಮೂರ್ನಾಲ್ಕು ಪ್ರಶ್ನೆ ಕೇಳುತ್ತೇವೆ, ಅವರು ಉತ್ತರ ನೀಡಲಿ” ಎಂದು ಸವಾಲೆಸೆದರು.

“ಪಾದಯಾತ್ರೆ ಮೂಲಕ ಜೆಡಿಎಸ್ ನೆಲೆ ಕಳೆದುಕೊಳ್ಳುತ್ತದೆ ಎಂದು ಅವರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅವರನ್ನು ಹೆದರಿಸಿ, ಬೆದರಿಸಿ ಪಾದಯಾತ್ರೆಗೆ ಒಪ್ಪಿಸಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ. ಅದು ಅವರವರ ವಿಚಾರ. ಅವರ ಒಪ್ಪಿಗೆಯ ಗುಟ್ಟು ಏನು ಎಂದು ಅವರನ್ನೇ ಕೇಳಿ” ಎಂದು ಲೇವಡಿ ಮಾಡಿದರು.

ಈ ಜನಾಂದೋಲನ ಸಭೆ ರಾಜ್ಯಾದ್ಯಂತ ಮಾಡುತ್ತೀರಾ ಎಂದು ಕೇಳಿದಾಗ, “ನಾವು ಮೊದಲು ಅವರ ಅವಧಿಯಲ್ಲಿ ಈ ರೀತಿಯ ಅಕ್ರಮಗಳು ನಡೆದಿದ್ದವು, ಇದರ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನೆ ಮಾಡುತ್ತೇವೆ. ಅವರು ಉತ್ತರ ನೀಡಲಿ. ಆಮೇಲೆ ನಾವು ರಾಜ್ಯ ಮಟ್ಟದ ಬಗ್ಗೆ ಆಲೋಚನೆ ಮಾಡುತ್ತೇವೆ” ಎಂದು ತಿಳಿಸಿದರು.

ನನ್ನ ಮೇಲೆ ದಾಳಿ ಮಾಡಲು ಇಡಿ ಸಿದ್ಧತೆ ಮಾಡಿಕೊಳ್ಳುತ್ತಿದೆ, ನಾನು ಚಹಾ, ಬಿಸ್ಕೆಟ್ ರೆಡಿ ಮಾಡಿಕೊಂಡು ಕಾಯುತ್ತಿದ್ದೇನೆ ಎಂಬ ರಾಹುಲ್ ಗಾಂಧಿ ಅವರ ಟ್ವೀಟ್ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರು. ಅವರು ಅವರದೇ ಆದ ರೀತಿಯಲ್ಲಿ ಮಾಹಿತಿ ಪಡೆದಿರುತ್ತಾರೆ. ಇನ್ನು ಸಂವಿಧಾನಿಕ ಸಂಸ್ಥೆಗಳು ಯಾವ ರೀತಿ ವರ್ತಿಸುತ್ತಿವೆ ಎಂದು ನೀವೆಲ್ಲರೂ ನೋಡುತ್ತಿದ್ದೀರಿ. ತನಿಖೆ ಹೆಸರಲ್ಲಿ ಅಧಿಕಾರಿಗಳಿಗೆ ಒತ್ತಡ ಹಾಕಿ ಮುಖ್ಯಮಂತ್ರಿ, ನನ್ನ ಹೆಸರು ಹೇಳುವಂತೆ ಬೆದರಿಸುವುದು ನಡೆಯುತ್ತಿದೆ. ಸಿಬಿಐ ಏನೇನು ಮಾಡುತ್ತಿದೆ ಎಂಬ ಪಟ್ಟಿ ನನ್ನ ಬಳಿ ಇದೆ. ನಿಧಾನವಾಗಿ ಅದರ ಬಗ್ಗೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.

ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು " ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್ ತಂತ್ರಜ್ಞಾನದ ಬೆಳವಣಿಗೆಗೆ ಸರ್ಕಾರದ ಜೊತೆ ಎಲ್ಲರು ಕೈ ಜೋಡಿಸಬೇಕು. ಬೆಂಗಳೂರನ್ನು ಅಗ್ರಗಣ್ಯ ನಗರವನ್ನಾಗಿ ಮಾಡಲು ಸಹಕರಿಸಬೇಕು" ಎಂದು ಹೇಳಿದರು.

"ನ್ಯಾನೋ ತಂತ್ರಜ್ಞಾನದಿಂದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಅತ್ಯಂತ ಸಮರ್ಥವಾಗಿ ಉತ್ಪಾದನೆಯನ್ನು ಮಾಡಬಹುದು. ಈ ತಂತ್ರಜ್ಞಾನದಿಂದ ಕೃಷಿ, ವಿದ್ಯುತ್, ಆಹಾರ ಸಂಸ್ಕರಣೆ, ಕೈಗಾರಿಕಾ ಕ್ಷೇತ್ರಗಳಲ್ಲಿ ಕಡಿಮೆ ದರದಲ್ಲಿ ಹೆಚ್ಚು ಉತ್ಪಾದನೆ ಮಾಡಿ ಜನಸ್ನೇಹಿಯಾಗಿಸಬೇಕಿದೆ" ಎಂದರು.

"ರಾಜ್ಯದಲ್ಲಿ ಕೈಗಾರಿಕೆ, ಶೈಕ್ಷಣಿಕ ಮತ್ತು ಸಂಶೋಧಕರಿಗೆ ಜ್ಞಾನ ವಿನಿಮಯಕ್ಕೆ ಈ ಕಾರ್ಯಕ್ರಮವು ಜಾಗತಿಕ ವೇದಿಕೆಯಾಗಿದೆ. ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೆ ನೆರವಾಗಲಿದೆ. ನ್ಯಾನೋ ವಿಜ್ಞಾನ ಮತ್ತು ತಂತ್ರಜ್ಞಾನವು ಭವಿಷ್ಯದಲ್ಲಿ ಹೆಚ್ಚು ಉಪಯೋಗಕ್ಕೆ ಬರಲಿದೆ. ರಾಜ್ಯ ಸರಕಾರವು ಇದರ ಬೆಳವಣಿಗೆಗೆ ಸಾಕಷ್ಟು ಆದ್ಯತೆ ಕೊಟ್ಟಿದೆ" ಎಂದು ಹೇಳಿದರು.

"ನ್ಯಾನೋ ತಂತ್ರಜ್ಞಾನ ಇಂದು ಹೆಚ್ಚು ಪ್ರಚಲಿತದಲ್ಲಿದ್ದು, ಕೃಷಿಯಲ್ಲೂ ಬಳಸಲಾಗುತ್ತಿದೆ. ಈ ಮೂಲಕ ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿದ್ದು, ಇದರಿಂದ ರಾಜ್ಯದ ಆರ್ಥಿಕತೆಯು ಹೆಚ್ಚಾಗುತ್ತಿದೆ. ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರವು ನ್ಯಾನೋ ತಂತ್ರಜ್ಞಾನದಲ್ಲಿ ಹೆಚ್ಚು ಮುಂದುವರೆಯಬೇಕು. ಇದಕ್ಕೆ ನಮ್ಮ ಸರಕಾರವು ಸಂಪೂರ್ಣ ಸಹಕಾರ ನೀಡಲಿದ್ದು, ಅಗತ್ಯ ನೀತಿಗಳನ್ನು ರೂಪಿಸಲು ಬದ್ಧವಾಗಿದೆ" ಎಂದರು.

"ನ್ಯಾನೋ ತಂತ್ರಜ್ಞಾನವನ್ನು ಔಷಧಿ, ಮೆಟಿರಿಯಲ್ ವಿಜ್ಞಾನ, ಆಹಾರ ಸಂಸ್ಕರಣೆ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಅನ್ವಯಿಸಬೇಕಿದೆ. ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ಹೆಜ್ಜೆ ಗುರುತು ಮೂಡಿಸುವ ಸಲುವಾಗಿ ಹಾಗೂ ಬೆಂಗಳೂರಿನ ಹೆಸರನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಸಲುವಾಗಿ ಕಳೆದ ವರ್ಷ ಹೊಸ ಕಾನೂನು ತರಲಾಗಿದೆ" ಎಂದು ಹೇಳಿದರು.

"ನಾನು ಈ ಹಿಂದೆ ಇಂಧನ ಸಚಿವರಾಗಿದ್ದಾಗ ಪಾವಗಡದ ಬಳಿ ಸೋಲಾರ್ ಪಾರ್ಕನ್ನು ನಿರ್ಮಾಣ ಮಾಡಿಸಿದೆ. ಪ್ರಸ್ತುತ ಮೂರು- ನಾಲ್ಕು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ನ್ಯಾನೋ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ಅತ್ಯಂತ ಹೆಚ್ಚು ವಿದ್ಯುತ್ ಉತ್ಪಾದಿಸಬಹುದು" ಎಂದು ತಿಳಿಸಿದರು.

"ಕಸ ಸಂಸ್ಕರಣೆಗೆ ನ್ಯಾನೋ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಎನ್ನುವ ಬಗ್ಗೆ ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಕಸದಿಂದ ವಿದ್ಯುತ್ ಉತ್ಪಾದನೆ ಅಷ್ಟೊಂದು ಯಶಸ್ವಿ ಕಂಡಿಲ್ಲ. ಗ್ಯಾಸ್ಉತ್ಪಾದನೆ ಸ್ವಲ್ಪಮಟ್ಟಿಗೆ ಯಶಸ್ಸು ಕಂಡಿದೆ. ನ್ಯಾನೋ ತಂತ್ರಜ್ಞಾನ ಬಳಸಿಕೊಂಡು ಕಸದ ಸಮಸ್ಯೆ ಬಗೆಹರಿಸುವ ಬಗ್ಗೆ ಹೆಚ್ಚು ಗಮನ ಹರಿಸಬೇಕು. ನಮ್ಮ ಸರ್ಕಾರ ತಂತ್ರಜ್ಞಾನದ ಬೆಳವಣಿಗೆಗೆ ಹೆಚ್ಚು ಮಹತ್ವ ನೀಡುತ್ತದೆ" ಎಂದು ಭರವಸೆ ನೀಡಿದರು.

"ಬೆಂಗಳೂರು ತನ್ನ ಹೊಸ ಆವಿಷ್ಕಾರಗಳಿಗೆ ಹೆಸರು ಮಾಡಿದೆ. ನ್ಯಾನೋ ಟೆಕ್ನಾಲಜಿ, ಐಟಿ, ಬಯೋ ಟೆಕ್ನಾಲಜಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಹೊಸ, ಹೊಸ ಆವಿಷ್ಕಾರಗಳನ್ನು ಮಾಡುತ್ತಿದೆ. ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಭಾರತೀಯ ವಿಜ್ಞಾನ ಸಂಸ್ಥೆಗೆ ಭೂಮಿಯನ್ನು ನೀಡಿ ವಿಜ್ಞಾನ ಮತ್ತು ಸಂಶೋಧನೆ ಹೆಚ್ಚಿನ ಒತ್ತು ನೀಡಿದರು. ಇದು ಬೆಂಗಳೂರಿನ ಬಲವರ್ಧನೆಗೆ ಕಾರಣವಾಯಿತು" ಎಂದರು.

"ಬಯೋಟೆಕ್ನಾಲಜಿ, ಐಟಿ ಕ್ಷೇತ್ರದಲ್ಲಿ ಅನೇಕ ಸಂಶೋಧನಾ ಸಂಸ್ಥೆಗಳು ಬೆಂಗಳೂರಿನ ಹೆಸರನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿವೆ. ನೂರಾರು ಪ್ರಸಿದ್ಧ ಚಿಂತಕರು, ವಿಜ್ಞಾನಿಗಳು ಬೆಂಗಳೂರಿನಲ್ಲಿ ಶಿಕ್ಷಣ ಪಡೆದಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ಅವರು ನಮಗೆಲ್ಲ ಮಾದರಿಯಾಗಿದ್ದಾರೆ. ಕರ್ನಾಟಕದಲ್ಲಿ ಸುಮಾರು 300ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳಿವೆ. ನಾವು ವರ್ಷಕ್ಕೆ ಸುಮಾರು 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಯಾರು ಮಾಡುತ್ತಿದ್ದೇವೆ" ಎಂದು ಹೇಳಿದರು.

"ಕರ್ನಾಟಕದಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಪ್ರಪಂಚದಲ್ಲಿ ನಾನಾ ಭಾಗಗಳಲ್ಲಿ ಇಂಜಿನಿಯರ್ ಗಳಾಗಿದ್ದಾರೆ. ಆ ದೇಶಗಳ ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆ ನೀಡುತ್ತಿದ್ದಾರೆ. ಶಾಸಕ ಮಿತ್ರ ರಿಜ್ವಾನ್ ಹರ್ಷದ್ ಹೇಳಿದಂತೆ ಬೆಂಗಳೂರು ಅತ್ಯಂತ ಹೆಚ್ಚು ಮಾನವ ಸಂಪನ್ಮೂಲವನ್ನು ಹೊಂದಿರುವ ನಗರ. ಬೆಂಗಳೂರು ಮಾತ್ರ ಬೆಳೆಯುತ್ತಿಲ್ಲ. ಈ ದೇಶದ ಆರ್ಥಿಕತೆ, ಬೌದ್ಧಿಕತೆ ಸೇರಿದಂತೆ ನೂರಾರು ಜನರ ಬದುಕನ್ನು ಬೆಳೆಸುತ್ತಿದೆ" ಎಂದರು.

"ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜೊತೆಗೆ ಅತ್ಯಂತ ಹೆಚ್ಚು ವಿದೇಶಿ ಬಂಡವಾಳವನ್ನು ಸೆಳೆಯುತ್ತಿದೆ. ಆಟೋಮೊಬೈಲ್, ಟೆಕ್ಸ್ಟೈಲ್, ಎಲೆಕ್ಟ್ರಾನಿಕ್ಸ್, ಸೇರಿದಂತೆ ಅನೇಕ ರೀತಿಯ ಉದ್ದಿಮೆಗಳು ರಾಜ್ಯ ರಾಜಧಾನಿಯಲ್ಲಿವೆ. ಬೆಂಗಳೂರಿನ ಸಂಸ್ಕೃತಿ ಮತ್ತು ವಾತಾವರಣ ಎರಡೂ ಅನುಕೂಲಕರವಾಗಿದೆ. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಇದ್ದೇ ಅಲ್ಲಿ ಹೆಚ್ಚು ಬಿಸಿ ಹವಾಮಾನವಿದೆ. ಆದರೆ ಬೆಂಗಳೂರು ವರ್ಷದ ಹತ್ತು ತಿಂಗಳೂ ತಣ್ಣಗಿನ ಹವಾಮಾನ ಹೊಂದಿರುತ್ತದೆ . ಇದು ಅನೇಕ ಉದ್ದಿಮೆಗಳ ಬೆಳವಣಿಗೆಗೆ ಸಹಕಾರಿಯಾಗಿದೆ" ಎಂದರು.

"ಇದೇ ವೇಳೆ ವೇದಿಕೆಯಲ್ಲಿದ್ದ ಭಾರತ ರತ್ನ ವಿಜ್ಞಾನಿ ಸಿ ಎನ್ ಆರ್ ರಾವ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ದೇಶದ ಆಸ್ತಿಯಾದ ಅವರಿಗೆ ಆಯಸ್ಸು, ಆರೋಗ್ಯ ಭಗವಂತ ನೀಡಲಿ" ಎಂದು ತಿಳಿಸಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಬಿಡದಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಾಂದೋಲನ ಸಭೆಗೆ ಮುನ್ನ ಬೈಕ್ ರಾಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಗಡಿ ಶಾಸಕ ಬಾಲಕೃಷ್ಣ ಅವರ ಜೋಡಿ ಸವಾರಿ ನಡೆಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ