ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ತಮ್ಮ ಬೆಂಬಲಿಗರು ಇನ್ನೂ ಹತ್ತು ವರ್ಷ ಸಕ್ರಿಯ ರಾಜಕೀಯದಲ್ಲಿ ಮುಂದುವರಿಯುವಂತೆ ಮನವಿ ಮಾಡಿದರೂ, ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ.
ಶನಿವಾರ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ಬಗ್ಗೆ ಪ್ರಕಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದ ಅವರು, 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಾವು ಚುನಾವಣಾ ಕಣಕ್ಕಿಳಿಯುವುದಿಲ್ಲ ಎಂದು ಪ್ರಕಟಿಸಿದರು. ಅವರ ಈ ಹೇಳಿಕೆಯನ್ನು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದ್ದು, ಮುಂದಿನ ಚುನಾವಣೆಯಿಂದ ದೂರ ಉಳಿಯುವ ಅವರ ನಿರ್ಧಾರಕ್ಕೆ ಅಧಿಕೃತ ಮುದ್ರೆ ಬಿದ್ದಂತಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೆಂಬಲಿಗರು ಸಿದ್ದರಾಮಯ್ಯ ಅವರು ಇನ್ನೂ ಹತ್ತು ವರ್ಷಗಳ ಕಾಲ ಸಕ್ರಿಯ ರಾಜಕೀಯದಲ್ಲಿ ಮುಂದುವರಿದು ಪಕ್ಷಕ್ಕೆ ನಾಯಕತ್ವ ನೀಡಬೇಕು ಎಂದು ಮನವಿ ಮಾಡಿದರು. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ ಮುಂದುವರಿಯಬೇಕೆಂದು ಅವರು ಒತ್ತಾಯಿಸಿದರು.
ಆದರೆ, ಬೆಂಬಲಿಗರ ಮನವಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪುನರುಚ್ಚರಿಸಿದರು. ಸಾರ್ವಜನಿಕ ವೇದಿಕೆಯಲ್ಲೇ ಈ ಘೋಷಣೆ ಮಾಡುವ ಮೂಲಕ ತಮ್ಮ ಮುಂದಿನ ರಾಜಕೀಯ ಯೋಜನೆಗಳ ಕುರಿತು ಸ್ಪಷ್ಟ ಸಂದೇಶ ರವಾನಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮೇ 28 ರಂದು ರಾಜೀನಾಮೆ ಸಲ್ಲಿಸಿದ್ದರು. ಮೊದಲ ಅವಧಿಯಲ್ಲಿ 2013ರ ಮೇ 13ರಿಂದ ಮೇ 2018ರ ಮೇ 15ರ ವರೆಗೆ ಅವರು ಮುಖ್ಯಮಂತ್ರಿಯಾಗಿ 5 ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ್ದರೆ, ಎರಡನೇ ಅವಧಿಯಲ್ಲಿ 20 ಮೇ 2023ರ ಮೇ20 ರಿಂದ 2026 ರ ಜೂನ್3ರ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರು ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದಾರೆ.