ಬೆಳಗಾವಿ : ಪ್ರಸ್ತುತ ಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಮಹತ್ತರವಾದುದು. ಇದು ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ಆವರಿಸಿಕೊಂಡಿದೆ. ಮಾಹಿತಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಸಂವಹನ, ಸೇನೆ, ಪರಿಸರ, ಉತ್ಪಾದನೆ, ಎಲೆಕ್ಟ್ರಾನಿಕ್ಸ್ , ವೈದ್ಯಕೀಯ, ಕೃಷಿ, ಪರಿಸರ, ಶಕ್ತಿ, ಕೈಗಾರಿಕೆ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ಹೊಸ ಕ್ರಾಂತಿಕಾರಕ ಬದಲಾವಣೆಯನ್ನು ತರುತ್ತಿದೆ ಎಂದು
ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಅಭಿಪ್ರಾಯಪಟ್ಟರು.
ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗ, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗ ಮತ್ತು ಬೆಂಗಳೂರು ಇಂಡಿಯಾ ನ್ಯಾನೋ ಹಾಗೂ ಸೆಂಟರ್ ಫಾರ್ ನ್ಯಾನೋ ಆ್ಯಂಡ್ ಸಾಫ್ಟ್ ಮ್ಯಾಟರ್ ಸೈನ್ಸಸ್ ಹಾಗೂ ಕೆಎಸ್ಟಿಇಪಿಎಸ್ ಸಹಯೋಗದಲ್ಲಿ "ನ್ಯಾನೋ ಜಾಥಾ-2026" ರ ಕುರಿತು ಮಂಗಳವಾರದಂದು ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಪಂಚ ಇಷ್ಟು ಸುಂದರವಾಗಿರಲು ವಿಜ್ಞಾನ ಕಾರಣ. ವಿಜ್ಞಾನ ಮನುಕುಲವನ್ನು, ನಾಗರಿಕತೆಯನ್ನು ಅತಿ ಎತ್ತರಕ್ಕೆ ಕೊಂಡೊಯ್ದಿದೆ. ಪ್ರತಿ ಕಾಲಘಟ್ಟದಲ್ಲಿ ಆದ ಸಂಶೋಧನೆಗಳು ಜಗತ್ತಿನ ಬದಲಾವಣೆಗೆ ನಾಂದಿ ಹಾಡಿವೆ. ವಿಜ್ಞಾನದ ವಿದ್ಯಾರ್ಥಿಗಳು ನ್ಯಾನೋ ತಂತ್ರಜ್ಞಾನದ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕು. ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೂಡ ನ್ಯಾನೋ ತಂತ್ರಜ್ಞಾನ ಬಳಕೆಯಾಗುತ್ತಿದೆ. ಇದರಿಂದ ಜಗತ್ತು ಅತಿ ವೇಗವಾಗಿ ಬದಲಾವಣೆಯಾಗುತ್ತಿದೆ.
ವಿದ್ಯಾರ್ಥಿಗಳಲ್ಲಿ ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಆಸಕ್ತಿ ಬೆಳೆಸಲು ಇಂತಹ ವಿಚಾರ ಸಂಕಿರಣಗಳು ಸಹಾಯವಾಗಲಿದೆ.
ವಿಜ್ಞಾನವು ಇಂದು ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಅದರ ಪ್ರಭಾವ ವಿಸ್ತರಿಸಿದೆ. ಪಠ್ಯ ಜ್ಞಾನದೊಂದಿಗೆ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಜ್ಞಾನ ದೊರೆಯುವ ಪ್ರತಿಯೊಂದು ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ನಿರಂತರವಾಗಿ ಕಲಿಯುವ ಮನೋಭಾವವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು.
ಇಂದಿನ ಯುವಜನತೆ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆವಿಷ್ಕಾರಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು. ಸಂಶೋಧನಾ ಮನೋಭಾವವನ್ನು ರೂಢಿಸಿಕೊಳ್ಳುವ ಮೂಲಕ ಸಮಾಜದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಹಿಡಿಯುವ ಜವಾಬ್ದಾರಿ ಎಂದು ವಿದ್ಯಾರ್ಥಿಗಳ ಮೇಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ ಅವರು ನ್ಯಾನೋ ವಿಜ್ಞಾನದ ಮಹತ್ವ, ಅದರ ಅಪಾರ ಸಾಧ್ಯತೆಗಳು ಹಾಗೂ ದೇಶದ ಅಭಿವೃದ್ಧಿಯಲ್ಲಿ ಅದರ ಪಾತ್ರವನ್ನು ವಿವರಿಸಿದರು. ವಿದ್ಯಾರ್ಥಿಗಳು ಸಂಶೋಧನಾ ಮನೋಭಾವವನ್ನು ಬೆಳೆಸಿಕೊಂಡು, ವಿಜ್ಞಾನ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳತ್ತ ಹೆಜ್ಜೆ ಇಡಬೇಕು. ವಿದ್ಯಾರ್ಥಿಗಳು ಕುತೂಹಲಿಗಳಾಗಬೇಕು. ಆಗ ಅವರು ಜ್ಞಾನ ಮತ್ತು ಸಂಶೋಧನೆಯಲ್ಲಿ ಪಾರಮ್ಯ ಸಾಧಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿಚಾರ ಸಂಕಿರಣದ ಸಂಯೋಜಕ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಬಿ. ಜಿ. ಹೆಗಡೆ ಅವರು ಪ್ರಾಸ್ತಾವಿಕ ನುಡಿಗಳಲ್ಲಿ ನ್ಯಾನೋ ತಂತ್ರಜ್ಞಾನವು ವಿಜ್ಞಾನವನ್ನು ಹೊಸ ದಿಗಂತಕ್ಕೆ ಅನಾವರಣಗೊಳಿಸಿದೆ ಎಂದರು .
ಸಂಪನ್ಮೂಲ ವ್ಯಕ್ತಿ ಧಾರವಾಡದ ಐಐಟಿಯ ಡೀನ್ ಹಾಗೂ ಪ್ರಾಧ್ಯಾಪಕ ಪ್ರೊ. ಶಿವಪ್ರಸಾದ್ ಅವರು ನ್ಯಾನೋ ತಂತ್ರಜ್ಞಾನವು ಭವಿಷ್ಯದಲ್ಲಿ ಕೈಗಾರಿಕೆ, ವೈದ್ಯಕೀಯ, ಕೃಷಿ, ಎಲೆಕ್ಟ್ರಾನಿಕ್ಸ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಬಲ್ಲ ತಂತ್ರಜ್ಞಾನವಾಗಿದೆ ಎಂದು ವಿವರಿಸಿದರು.
ಸೆಂಟರ್ ಫಾರ್ ನ್ಯಾನೋ ಅಂಡ್ ಸಾಫ್ಟ್ ಮ್ಯಾಟರ್ ಸೈನ್ಸಸ್ ಬೆಂಗಳೂರು ಸಂಸ್ಥೆಯ ಪ್ರೊ. ಎಸ್. ಕೃಷ್ಣಪ್ರಸಾದ್ ಅವರು ನ್ಯಾನೋ ವಸ್ತುಗಳ ವೈವಿಧ್ಯಮಯ ಆನ್ವಯಿಕೆಗಳು ಇಂದು ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.
ವಿಚಾರ ಸಂಕಿರಣದ ಅಂಗವಾಗಿ ಆಯೋಜಿಸಲಾಗಿದ್ದ ನ್ಯಾನೋ ಕ್ವಿಜ್, ನ್ಯಾನೋ ಪ್ರಯೋಗಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆಗಳಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ವಿಜ್ಞಾನದ ಹೊಸ ಅನುಭವವನ್ನು ಪಡೆದರು. ಈ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಕುತೂಹಲ, ಸಂಶೋಧನಾ ಮನೋಭಾವ ಹಾಗೂ ನವೀನ ಚಿಂತನೆಗೆ ಉತ್ತೇಜನ ನೀಡಿದವು.
ವಿಚಾರ ಸಂಕಿರಣದಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಡಾ. ಲಾವಣ್ಯ ಗುಂಜಾಳ ನಿರೂಪಿಸಿದರು. ಡಾ. ಮೃಣಾಲ ಕಂಗ್ರಾಳಕರ ವಂದಿಸಿದರು.