ಬೆಂಗಳೂರು: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ (ಇಎಸ್ಎ) ಘೋಷಣೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸುವ ಮುನ್ನ ಆಕ್ಷೇಪಣೆಗಳನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಆಹ್ವಾನಿಸಿದೆ. ತೊಂದರೆಗೆ ಒಳಗಾಗುವ ಗ್ರಾಮದವರು ಕೂಡಲೇ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟ ಹೇಳಿದೆ.
ಸಚಿವಾಲಯ ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆಯಲ್ಲಿ ಮಲೆನಾಡು ಭಾಗದ ಸಾವಿರಾರು ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿರುವುದು ಮಲೆನಾಡಿಗರಿಗೆ ಆಘಾತ ತಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು, ರೈತರು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ ಎಂದು ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಶ್ಚಿಮ ಘಟ್ಟ ವ್ಯಾಪ್ತಿಯ ಹಲವು ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿಸುವ ಪ್ರಸ್ತಾಪ ಮಾಡಲಾಗಿದೆ. ಅಧಿಸೂಚನೆಯ ಅನುಬಂಧ
'ಸಿ'ಯಲ್ಲಿ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮವಾರು ಅಧಿಕೃತ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಬಯಸುವವರು ಕೂಡಲೇ ಅಭಿಪ್ರಾಯಗಳನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಅಥವಾ esz [email protected] ಇ-ಮೇಲ್ ಮೂಲಕ ಕಳುಹಿಸಬಹುದು ಎಂದು ಹೇಳಿದ್ದಾರೆ.
'ಈಗಿರುವ ಅರಣ್ಯ ಕಾನೂನುಗಳೇ ರೈತರ ಉಸಿರುಗಟ್ಟಿಸಿವೆ. ಆರು ಜಿಲ್ಲೆಗಳ ಸಂಸದರು ನಿದ್ದೆ ಮಾಡಿದ್ದಾರೆ. ಇನ್ನೂ ಇತ್ತ ಗಮನ ಹರಿಸದಿದ್ದರೆ ಮಲೆನಾಡು ಕರಾವಳಿ ಜನಪರ ಒಕ್ಕೂಟದಿಂದ ಸಂಸದರ ಕಚೇರಿ ಎದುರು ಧರಣಿ ನಡೆಸಲಾಗುವುದು' ಎಂದು ಅನಿಲ್ ಹೊಸಕೊಪ್ಪ ಎಚ್ಚರಿಸಿದ್ದಾರೆ.