ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ವದಂತಿಗಳು ಬುಧವಾರದ ಹಠಾತ್ ಬೆಳವಣಿಗೆಗಳಿಂದಾಗಿ ಮತ್ತಷ್ಟು ತೀವ್ರಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ( ಮೇ 28) ಬೆಳಿಗ್ಗೆ ಕರೆದಿರುವ ನಿರ್ಣಾಯಕ ಉಪಾಹಾರ ಕೂಟದ (Breakfast Meeting) ಮೇಲೆ ಈಗ ಇಡೀ ರಾಜ್ಯದ ರಾಜಕೀಯ ವಲಯದ ಕಣ್ಣು ನೆಟ್ಟಿದ್ದು, ಸಿದ್ದರಾಮಯ್ಯ ಅವರು ತಮ್ಮ ಮುಂದಿನ ನಿರ್ಧಾರವನ್ನು ಸಚಿವರು ಹಾಗೂ ಹಿರಿಯ ನಾಯಕರಿಗೆ ತಿಳಿಸುವ ಸಾಧ್ಯತೆಯಿದೆ.
ಮಂಗಳವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ಈ ನಾಯಕತ್ವ ಬದಲಾವಣೆಯ ಚರ್ಚೆಗಳು ಬಿರುಸುಗೊಂಡಿವೆ. ನಂಬಲರ್ಹ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದ್ದು, ಇದು ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿಯಾಗಿ ನೂತನ ಸರ್ಕಾರ ರಚಿಸಲು ದಾರಿ ಸುಗಮ ಮಾಡಿಕೊಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಆದರೆ, ಈವರೆಗೆ ಕಾಂಗ್ರೆಸ್ ಹೈಕಮಾಂಡ್ ಅಥವಾ ರಾಜ್ಯ ಘಟಕದಿಂದ ನಾಯಕತ್ವ ಬದಲಾವಣೆಯ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಸದ್ಯಕ್ಕೆ ಹರಿದಾಡುತ್ತಿರುವ ಎಲ್ಲಾ ಮಾಹಿತಿ ಹಾಗೂ ವರದಿಗಳು ರಾಜಕೀಯ ವಲಯದ ಮೂಲಗಳು ಮತ್ತು ಊಹಾಪೋಹಗಳನ್ನಷ್ಟೇ ಆಧರಿಸಿವೆ.
ಮುಖ್ಯಮಂತ್ರಿಗಳ ನಿವಾಸದಲ್ಲಿ ಸುರ್ಜೇವಾಲ ಮ್ಯಾರಥಾನ್ ಸಭೆ
ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬುಧವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಮುಖಾಮುಖಿ ಸಭೆ ರಾಜಕೀಯವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ.
ಮತ್ತೊಂದೆಡೆ, ಬೆಂಗಳೂರಿಗೆ ವಾಪಸಾಗುವ ಮುನ್ನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಬುಧವಾರ ನವದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಗುರುವಾರ ಬೆಳಿಗ್ಗೆ 9ಕ್ಕೆ ಸಿದ್ದರಾಮಯ್ಯ ಉಪಾಹಾರ ಕೂಟ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಿಗ್ಗೆ 9 ಗಂಟೆಗೆ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಹೈಪ್ರೊಫೈಲ್ ಉಪಾಹಾರ ಕೂಟವನ್ನು ಹಮ್ಮಿಕೊಂಡಿದ್ದಾರೆ. ಈ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರು ಹಾಗೂ ಪಕ್ಷದ ಶಾಸಕರು ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಮುಖ್ಯ ಸಚೇತಕ (Chief Whip) ಅಶೋಕ ಪಟ್ಟಣ ಅವರ ಹೇಳಿಕೆ ರಾಜೀನಾಮೆ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. “ಮುಖ್ಯಮಂತ್ರಿಗಳು ಗುರುವಾರ ಮಧ್ಯಾಹ್ನ 3:00 ಗಂಟೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ನಾನು ಭಾವಿಸುತ್ತೇನೆ. ನಮಗೆ ಈವರೆಗೆ ಅಧಿಕೃತವಾಗಿ ಶಾಸಕಾಂಗ ಪಕ್ಷದ (CLP) ಸಭೆಯ ಬಗ್ಗೆ ಯಾವುದೇ ಸೂಚನೆ ಬಂದಿಲ್ಲ. ಆದರೆ ಈ ಎಲ್ಲಾ ಬೆಳವಣಿಗೆಗಳು ಅತ್ಯಂತ ಅನಿರೀಕ್ಷಿತವಾಗಿ ಸಂಭವಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಹೊಸ ಸೂತ್ರ..?
ಪಕ್ಷದ ಮೂಲಗಳ ಪ್ರಕಾರ, ಮುಂಬರುವ ಆಡಳಿತಾತ್ಮಕ ಬದಲಾವಣೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಿರ್ದಿಷ್ಟ ಬ್ಲೂಪ್ರಿಂಟ್ (ಮಾರ್ಗಸೂಚಿ) ಸಿದ್ಧಪಡಿಸಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ ಅರ್ಹತೆ, ಯುವ ನಾಯಕತ್ವ ಮತ್ತು ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ಹೈಕಮಾಂಡ್ ಆಶಯವಾಗಿದೆ. ಇದರ ಜೊತೆಗೆ ದಲಿತರು, ಹಿಂದುಳಿದ ವರ್ಗಗಳು (OBC) ಸೇರಿದಂತೆ ಎಲ್ಲಾ ಜಾತಿಗಳಿಗೆ ಸಮಾನ ಪ್ರಾತಿನಿಧ್ಯ ಸಿಗುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಇದೇ ವೇಳೆ, ಈವರೆಗೆ ಕಳಪೆ ಪ್ರದರ್ಶನ ನೀಡಿದ ಸಚಿವರನ್ನು ಸಂಪುಟದಿಂದ ಕೈಬಿಡಲು ಹೈಕಮಾಂಡ್ ಒಲವು ತೋರಿದೆ ಎಂದು ಹೇಳಲಾಗಿದೆ.
ವದಂತಿಗಳಿಗೆ ಕಿವಿಗೊಡಬೇಡಿ: ಸುರ್ಜೇವಾಲ ಮನವಿ
ರಾಜಕೀಯ ವಲಯದ ಗೊಂದಲಗಳ ನಡುವೆ, ರಣದೀಪ ಸಿಂಗ್ ಸುರ್ಜೇವಾಲ ಅವರು, “ದಯವಿಟ್ಟು ಯಾರೂ ನಾಯಕತ್ವ ಬದಲಾವಣೆಯ ಕುರಿತು ಊಹಾಪೋಹಗಳನ್ನು ಹಬ್ಬಿಸಬೇಡಿ. ರಾಜ್ಯದ ಹಿತದೃಷ್ಟಿಯಿಂದ ಮತ್ತು ನಾಯಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂಬ ಭರವಸೆಯನ್ನು ಕರ್ನಾಟಕದ ಜನತೆಗೆ ನೀಡಲು ಬಯಸುತ್ತೇನೆ. ಪ್ರಸ್ತುತ ಯಾವುದೇ ಅಧಿಕೃತ ಸಿಎಲ್ಪಿ ಸಭೆಯನ್ನು ಕರೆಯಲಾಗಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.
ಒಟ್ಟಾರೆಯಾಗಿ, ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಗಳ ನಿವಾಸದಿಂದ ನಾಯಕರು ಹೊರಬಂದ ಬಳಿಕವಷ್ಟೇ ಮುಂದಿನ ರಾಜಕೀಯ ಚಿತ್ರಣ ಸಂಪೂರ್ಣವಾಗಿ ಸ್ಪಷ್ಟವಾಗಲಿದೆ ಎಂದು ಹಲವು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಗುರುವಾರದ ಉಪಾಹಾರ ಕೂಟದತ್ತ ನೆಟ್ಟಿದೆ.
