ಮಾಸ್ಕೊ: ಪಾಕಿಸ್ತಾನದ ಮೇಲೆ ಭಾರತ ದಾಳಿ ನಡೆಸಿದರೆ ಅಥವಾ ಸಿಂಧೂ ನದಿ ನೀರಿನ ಹರಿವಿಗೆ ತಡೆ ಒಡ್ಡಿದರೆ ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿ ಪಾಕಿಸ್ತಾನ ಇಂದು (ಸೋಮವಾರ) ಬೆದರಿಕೆ ಹಾಕಿದೆ.
ರಷ್ಯಾದ ಟಿಎಎಸ್ಎಸ್ ನ್ಯೂಸ್ ಏಜೆನ್ಸಿಯಲ್ಲಿ ಈ ಕುರಿತು ಮಾತನಾಡಿದ ಪಾಕಿಸ್ತಾನದ ರಾಯಭಾರಿ ಮುಹಮ್ಮದ್ ಖಾಲಿ ಜಮಾಲಿ ಭಾರತಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
ಏಪ್ರಿಲ್ 26ರಂದು ಪಹಲ್ಲಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
ದಾಳಿಯಲ್ಲಿ ಭಾಗಿಯಾದವರನ್ನು ಹಾಗೂ ಬೆಂಬಲಿಸಿದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ಭಾರತ ಸರ್ಕಾರ ಹೇಳಿದೆ.
‘ಆದರೆ ಭಾರತದಿಂದ ಎದುರಾಗುವ ಯಾವುದೇ ರೀತಿಯ ಆಕ್ರಮಣಕ್ಕೆ ತಕ್ಕ ರೀತಿಯಲ್ಲಿ ಉತ್ತರಿಸಲು ಪಾಕಿಸ್ತಾನ ಸಿದ್ಧವಾಗಿದೆ. ಪಾಕಿಸ್ತಾನ ತನ್ನೆಲ್ಲ ಬಲವನ್ನು ಪ್ರಯೋಗ ಮಾಡಲಿದೆ. ಸಾಂಪ್ರದಾಯಿಕ ಹಾಗೂ ಅಣ್ವಸ್ತ್ರ ಎರಡೂ ರೀತಿಯ ಯುದ್ದಕ್ಕೂ ಸಜ್ಜಾಗಿದ್ದೇವೆ’ ಎಂದು ಅವರು ಹೇಳಿದ್ದಾರೆ.
ಅದೇ ರೀತಿ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿ ನೀರಿನ ಹರಿವನ್ನು ತಡೆದರೆ ಅದು ಯುದ್ಧಕ್ಕೆ ಸಮಾನವಾಗಿರಲಿದೆ. ಇದರ ವಿರುದ್ಧವೂ ನ್ಯೂಕ್ಲಿಯರ್ ದಾಳಿ ನಡೆಸುವುದಾಗಿ ಎಚ್ಚರಿಸಿದ್ದಾರೆ.
‘ಪರಮಾಣು ಸಾಮರ್ಥ್ಯದ ರಾಷ್ಟ್ರ ಆಗಿದ್ದರಿಂದ ಉಭಯ ದೇಶಗಳು ಉದ್ವಿಗ್ನ ಶಮನಕ್ಕೆ ಯತ್ನಿಸಬೇಕು’ ಎಂದು ಅವರು ಹೇಳಿದ್ದಾರೆ.
ಮೋದಿ ಜೊತೆ ಪುಟಿನ್ ಚರ್ಚೆ; ದಾಳಿಕೋರರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ
ನವದೆಹಲಿ: ರಷ್ಯಾದ ಅಧ್ಯಕ್ಷ ವ್ಯಾಡಿಮಿರ್ ಪುಟಿನ್
ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಪಹಲ್ಲಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಬಲವಾಗಿ ಖಂಡಿಸಿದ್ದು, ದಾಳಿಕೋರರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದ್ದಾರೆ.
ಇದೇ ವೇಳೆ ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಪುಟಿನ್ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.
ಭಾರತ ಹಾಗೂ ರಷ್ಯಾ ನಡುವಣ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ತಮ್ಮ ಬದ್ಧತೆಯನ್ನು ಮೋದಿ ಹಾಗೂ ಪುಟಿನ್ ಪುನರುಚ್ಚರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.