ಬೆಳಗಾವಿ :
ಯೋಗದಿಂದ ಆರೋಗ್ಯ ತುಂಬಾ ಚೆನ್ನಾಗಿರುತ್ತದೆ. ಆದ್ದರಿಂದ ಯೋಗಾಭ್ಯಾಸವನ್ನು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಳ್ಳಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ 9 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಸುದೈವ ಕುಟುಂಬಕಂ ಹಾಗೂ ಪ್ರತಿ ಅಂಗಳದಲ್ಲಿ ಯೋಗ ಎಂಬ ಘೋಷವಾಕ್ಯದೊಂದಿಗೆ ಯೋಗ ನಡಿಗೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಯೋಗವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯದ ಮಾರ್ಗವಾಗಿ ಒಪ್ಪಿಕೊಳ್ಳಲಾಗಿದೆ. ದೈನಂದಿನ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಒತ್ತಡ ನಿವಾರಣೆ ಸಾಧ್ಯವಾಗಲಿದೆ ಎಂದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಿಂದ ಆರಂಭಗೊಂಡ ಯೋಗ ನಡಿಗೆಯು ಚೆನ್ನಮ್ಮ ವೃತ್ತದ ಮೂಲಕ ಜಿಲ್ಲಾ ಪಂಚಾಯತಿ ಕಾರ್ಯಾಲಯವನ್ನು ತಲುಪಿತು.
ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗದ ಮಹತ್ವ, ಉಪಯೋಗದ ಬಗ್ಗೆ ಅರಿವು ಮೂಡಿಸುವ ಸಂದೇಶ ಫಲಕಗಳನ್ನು ಪ್ರದರ್ಶಿಸಲಾಯಿತು.
ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಶ್ರೀಕಾಂತ್ ಸುಣಧೋಳಿ ಹಾಗೂ ಮಹಿಳೆಯರು, ವಿವಿಧ ಇಲಾಖೆಯ ಅಧಿಕಾರಿಗಳು ನಡಿಗೆಯಲ್ಲಿ ಪಾಲ್ಗೊಂಡಿದ್ದರು.

 
             
         
         
        
 
  
        
 
    