ಚಿತ್ರದುರ್ಗ: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುವಾಗ ಈ ಅಪಘಾತ ನಡೆದಿದೆ. ಮಾರ್ಗಮಧ್ಯೆ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿಯುವಾಗ ಸ್ಕೂಟರ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಅವರ ತಲೆ, ಕೈ,ಕಾಲುಗಳಿಗೆ ಪೆಟ್ಟು ಬಿದ್ದಿದೆ.
ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ಅವರನ್ನು ಕಳುಹಿಸಲಾಯಿತು. ರುದ್ರಪ್ಪ ಲಮಾಣಿ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.